ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದ ರಾಷ್ಟ್ರೀಯ ಹೆದ್ದಾರಿ–50ರ ಸಮೀಪ ಇರುವ ಖಾಸಗಿ ಕಾರು ಸರ್ವಿಸ್ ಸೆಂಟರ್ನಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರೀ ನಷ್ಟ ಸಂಭವಿಸಿದೆ. ಕ್ಷಣಾರ್ಧದಲ್ಲಿ ಹರಡಿದ ಬೆಂಕಿಯಿಂದ ಸರ್ವೀಸ್ ಸೆಂಟರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಹಣಮಂತ ಕನಮಡಿ ಅವರಿಗೆ ಸೇರಿದ ಈ ಕಾರು ಸರ್ವಿಸ್ ಸೆಂಟರ್ನಲ್ಲಿ ರಿಪೇರಿ ಹಾಗೂ ನಿಯಮಿತ ಸರ್ವಿಸ್ ಗಾಗಿ ನಿಲ್ಲಿಸಲಾಗಿದ್ದ 20ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಒಂದು ಕೋಟಿಗೂ ಅಧಿಕ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಆರಂಭಿಸಲಾಗಿದೆ.



