July 23, 2026
Thursday, July 23, 2026
spot_img

ಕ್ಲಾಸ್‌ ನಡೆಯುತ್ತಿರುವಾಗಲೇ ಬೆಂಕಿ: ಶಿಕ್ಷಕರ ಸಮಯಪ್ರಜ್ಞೆಯಿಂದ ಉಳಿಯಿತು 2 ಸಾವಿರ ಮಕ್ಕಳ ಜೀವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಗೇರಿ ಸಮೀಪದ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ವಿದ್ಯುತ್ ದೋಷದಿಂದ ಬೆಂಕಿ ಕಾಣಿಸಿಕೊಂಡ ಘಟನೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ತರಗತಿಗಳು ನಡೆಯುತ್ತಿದ್ದ ವೇಳೆಯೇ ಶಾಲೆಯ ಮೇಲಂತಸ್ತಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ.

ಮೇಲಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ

ಮಾಹಿತಿಯ ಪ್ರಕಾರ, ಬೆಳಗ್ಗೆ ಶಾಲೆ ಎಂದಿನಂತೆ ಆರಂಭವಾಗಿತ್ತು. ಸುಮಾರು 10.15ರ ವೇಳೆಗೆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಿದ್ಯುತ್ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಹೊಗೆ ಹಾಗೂ ಜ್ವಾಲೆಗಳು ಮೂರನೇ ಮಹಡಿಗೂ ವ್ಯಾಪಿಸಿದ ಪರಿಣಾಮ ಸಿಬ್ಬಂದಿ ಎಚ್ಚೆತ್ತುಕೊಂಡರು.

ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ

ಶಾಲಾ ಆಡಳಿತ ಮತ್ತು ಶಿಕ್ಷಕರು ತಕ್ಷಣ ಕ್ರಮವಹಿಸಿ ವಿದ್ಯಾರ್ಥಿಗಳನ್ನು ಕಟ್ಟಡದಿಂದ ಹೊರಗೆ ಕರೆದೊಯ್ದರು. ಸುಮಾರು 2 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಲ್ಲಿದ್ದರೂ, ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿರುವುದರಿಂದ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯದ ಪ್ರಕರಣ ವರದಿಯಾಗಿಲ್ಲ.

ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿವೆ. ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಸಹಕರಿಸಿದರು.

ಪೋಷಕರಲ್ಲಿ ಆತಂಕ

ಅವಘಾತ ಸಂಭವಿಸಿದ ಸಮಯದಲ್ಲಿ ಶಾಲೆಯಲ್ಲಿ ಪೋಷಕರ ಸಭೆಯೂ ನಡೆಯುತ್ತಿತ್ತು. ಬೆಂಕಿ ಸುದ್ದಿ ಹರಡುತ್ತಿದ್ದಂತೆಯೇ ಅನೇಕ ಪೋಷಕರು ಶಾಲೆಯತ್ತ ಧಾವಿಸಿದ್ದು, ಕೆಲಕಾಲ ಗೇಟ್‌ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !