ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಬ್ರಹ್ಮಶಕ್ತಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದ (ಐಸಿಯು) ವಾರ್ಡ್ನಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಯ ಸಹಾಯದಿಂದ ಅಗ್ನಿಶಾಮಕ ದಳ ಸಿಬ್ಬಂದಿ ಆಸ್ಪತ್ರೆಯಲ್ಲಿ ಉಳಿದ ರೋಗಿಗಳನ್ನು ರಕ್ಷಣೆ ಮಾಡಿದ್ದಾರೆ.
ಪ್ರೇಮ್ ನಗರದ ಲಕ್ಷ್ಮಿ ವಿಹಾರ್ ನಿವಾಸಿ ಹೋಳಿ (64)ಮೃತ ದುರ್ದೈವಿಯಾಗಿದ್ದು, ಬುಧ್ ವಿಹಾರ್ನಲ್ಲಿರುವ ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಒಂಭತ್ತು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ತಹಬದಿಗೆ ತಂದಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂತ್ರಪಿಂಡದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯನ್ನು ಮಾತ್ರ ರಕ್ಷಿಸಲು ಸಾಧ್ಯವಾಗಲಿಲ್ಲ, ಉಳಿದ ಎಲ್ಲಾ ರೋಗಿಗಳನ್ನು ಅಪಾಯದಿಂದ ಪಾರು ಮಾಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ. ವೈದ್ಯರು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಬೇರೆ ಬೇರೆ ಆಸ್ಪತ್ರೆಗಳಿಗೆ ಅವರನ್ನು ಕಳಿಸಿಕೊಡಲಾಗಿದೆ. ಬೆಳಗಿನ ಜಾವ 3.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ ನಮಗೆ ಕರೆ ಬಂದಿದ್ದು, ಬೆಳಗ್ಗೆ 5 ಗಂಟೆ ಸುಮಾರಿಗೆ. ಮಾಹಿತಿ ನೀಡುವಲ್ಲಿ ವಿಳಂಬವಾದ ಕಾರಣ ಓರ್ವ ರೋಗಿ ಸಾವನ್ನಪ್ಪಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.