ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಾಲ್ಕು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 53 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಂಟ್ರ್ಯಾಕ್ಟರ್ ರಮೇಶ್ ಬಾಬು ಎಂಬವರ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ವ್ಯಾಪಿಸಿದ ಪರಿಣಾಮ, ಅವರ ಪತ್ನಿ ಸವಿತಾ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:/
ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮನೆಯಲ್ಲಿ ಸಿಲುಕಿದ್ದ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ಸುರಕ್ಷಿತವಾಗಿ ಹೊರತೆಗೆದರು. ಗಾಯಗೊಂಡವರನ್ನು ತಕ್ಷಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಅಗ್ನಿ ಅವಘಡದ ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೇಗೆ ಪ್ರಾರಂಭವಾಯಿತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಅಡುಗೆ ಕೋಣೆಯಲ್ಲಿ ಅನಿಲ ಸೋರಿಕೆಯಾಗಿತ್ತೇ ಅಥವಾ ವಿದ್ಯುತ್ ದೋಷವೇ ಕಾರಣ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.



