ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಭಾರತದ ಸ್ಪಂದನೆ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಮೇಲೆ ದುಷ್ಕರ್ಮಿ ನಿನ್ನೆ ಗುಂಡು ಹಾರಿಸುವುದರ ಕುರಿತು ಭಾರತ ಪ್ರತಿಕ್ರಿಯೆ ನೀಡಿದೆ. ಗಂಭೀರವಾಗಿ ಗಾಯಗೊಂಡಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಲಾಂಗ್ ಮಾರ್ಚ್ ಎಂಬ ರ್ಯಾಲಿಯ ಭಾಗವಾಗಿ ವಜೀರಾಬಾದ್‌ನ ಅಲ್ಲಾಹೋ ಚೌಕ್ ತಲುಪಿದಾಗ ಈ ಘಟನೆ ನಡೆದಿದೆ. ಪೊಲೀಸರು ಶೂಟರ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಗುಂಡಿನ ದಾಳಿಯಲ್ಲಿ ಇಮ್ರಾನ್ ಅವರ ಕಾಲಿಗೆ ಗಾಯವಾಗಿದೆ ಎಂದು ಪಿಟಿಐ ಮುಖಂಡ ಫವಾದ್ ಚೌಧರಿ ಹೇಳಿದ್ದಾರೆ. ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಪಾಕಿಸ್ತಾನದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಖೈಬರ್ ಪಖ್ತುಂಖ್ವಾದ ಪೇಶಾವರದಲ್ಲಿರುವ ಕಾರ್ಪ್ಸ್ ಕಮಾಂಡರ್ ಹೌಸ್ ಮುಂದೆ ಪ್ರತಿಭಟನೆಗಳು ಭುಗಿಲೆದ್ದವು. ಇಮ್ರಾನ್ ಮೇಲಿನ ದಾಳಿಯನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತೀವ್ರವಾಗಿ ಖಂಡಿಸಿದ್ದು, ಘಟನೆ ಕುರಿತು ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಮ್ರಾನ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಇಮ್ರಾನ್ ಮೇಲಿನ ಗುಂಡಿನ ದಾಳಿಯ ನಂತರ ಪಾಕಿಸ್ತಾನದ ಬೆಳವಣಿಗೆಗಳ ಬಗ್ಗೆ ಭಾರತ ಪ್ರತಿಕ್ರಿಯಿಸಿದೆ. ಪಾಕಿಸ್ತಾನದ ಪರಿಸ್ಥಿತಿಯ ಮೇಲೆ ಭಾರತ ಕಣ್ಣಿಟ್ಟಿದೆ ಮತ್ತು ಅಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!