ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಸಾಲಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಒಟ್ಟಾರೆ 15 ದಿನಗಳ ಕಾಲ ಅಧಿವೇಶನ ನಡೆಯಲಿದೆ.
ನಿನ್ನೆಯಷ್ಟೇ ಸಂಪುಟ ಸಹೋದ್ಯೋಗಿಗಳ ಖಾತೆ ಹಂಚಿಕೆಯನ್ನು ಸಿಎಂ ಪೂರ್ಣಗೊಳಿಸಿದ್ದಾರೆ. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಇಳಿಯಬಹುದು ಎಂದು ಕಾದುನೋಡಬೇಕಿದೆ.
ಅಧಿವೇಶನದ ಮೊದಲ ದಿನವಾದ ಇಂದು, ಇತ್ತೀಚೆಗೆ ಅಗಲಿದ ಮಾಜಿ ಸಚಿವ ಡಿ. ಸುಧಾಕರ್, ಚೆನ್ನಮ್ಮ ದೇವೇಗೌಡ ಸೇರಿದಂತೆ ಹಲವು ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಗುತ್ತದೆ. ವಿಧಾನಸಭಾಧ್ಯಕ್ಷರಾಗಿದ್ದ ಯು.ಟಿ. ಖಾದರ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ, ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ಹಾಗೂ ಪುಟ್ಟಣ್ಣ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯನ್ನಾಗಿ ನೇಮಿಸಲಾಗಿದೆ.
ಏನೆಲ್ಲಾ ವಿಷಯ ಚರ್ಚೆ?
ಮುಖ್ಯವಾಗಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಬಗ್ಗೆ ಹಾಗೂ ಬಿಡದಿ ಟೌನ್ಶಿಪ್ ಯೋಜನೆಯ ಬಗ್ಗೆ ಬಿಸಿಬಿಸಿ ಚರ್ಚೆಯಾಗಲಿದೆ. ಇದರ ಜೊತೆಗೆ ತಮಿಳುನಾಡಿಗೆ ನೀರು, ಅತಿವೃಷ್ಟಿ, ಮಳೆಹಾನಿ ಇನ್ನಿತರ ಸಮಸ್ಯೆಗಳು ಮುನ್ನೆಲೆಗೆ ಬರಲಿವೆ.
ಯಾರಿಗೆ ಎಲ್ಲಿ ಕೂರಲು ಅವಕಾಶ?
ಶಾಸಕರು ಸಚಿವರಾಗಿ ಬಡ್ತಿ ಪಡೆದಿರುವುದರಿಂದ ಆಡಳಿತ ಪಕ್ಷದ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖ ನಾಯಕರ ಆಸನಗಳಲ್ಲಿ ಪಲ್ಲಟವಾಗಿದ್ದು, ಹಿರಿತನದ ಆಧಾರದ ಮೇಲೆ ಹೊಸ ಸಚಿವರಿಗೆ ಮುಂಭಾಗದ ಸಾಲಿನಲ್ಲಿ ಆಸನ ಕಲ್ಪಿಸಲಾಗಿದೆ.



