ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನದಿ, ಕೆರೆಗಳಲ್ಲಿ ಮುಳುಗಿ ಸಾಯುವ ಜಲ ದುರಂತಗಳ ಸರಣಿ ಮುಂದುವರಿದಿದ್ದು, ಮಂತ್ರಾಲಯದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರುಪಾಲಾಗಿರುವ ಭೀಕರ ಘಟನೆ ನಡೆದಿದೆ.
ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23) ಮತ್ತು ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಅಪರ್ಣಾ ಎಂಬ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:
ಮಂತ್ರಾಲಯದಲ್ಲಿರುವ ಸಂಬಂಧಿಕರ ಮನೆಯಲ್ಲಿ ಆಯೋಜಿಸಲಾಗಿದ್ದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಇವರೆಲ್ಲರೂ ಬಂದಿದ್ದರು. ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದಾರೆ. ಆದರೆ, ನದಿಯ ನೀರಿನ ಆಳ ಮತ್ತು ಪ್ರವಾಹದ ಅರಿವಿಲ್ಲದೆ ಸುಳಿಗೆ ಸಿಲುಕಿ ಐವರೂ ಜಲಸಮಾಧಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಎಮ್ಮಿಗನೂರು ಡಿವೈಎಸ್ಪಿ ಭಾರ್ಗವಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರು ಮತ್ತು ರಕ್ಷಣಾ ಸಿಬ್ಬಂದಿ ಮೃತದೇಹಗಳ ಪತ್ತೆಗಾಗಿ ನದಿಯಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.



