ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಹಾನದಿಗೆ ಒಳಹರಿವು ಹೆಚ್ಚಾಗಿದ್ದು, ಪ್ರಮುಖ ಹೀರಕುಡ್ ಅಣೆಕಟ್ಟಿನ ಬರೋಬ್ಬರಿ 22 ಕ್ರೆಸ್ಟ್ ಗೇಟ್ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನದಿಯ ತಗ್ಗು ಪ್ರದೇಶದ 10 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಒಡಿಶಾ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.
ಮುಖ್ಯಮಂತ್ರಿಯಿಂದ ವೈಮಾನಿಕ ಸಮೀಕ್ಷೆ:
ಮಹಾನದಿ ಪಾತ್ರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಮುಖ್ಯಮಂತ್ರಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿ ಹಾನಿಯ ಪರಿಶೀಲನೆ ನಡೆಸಿದ್ದಾರೆ. ಅಣೆಕಟ್ಟಿನಿಂದ ಭಾರಿ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ನದಿಯ ದಂಡೆಯ ಮೇಲಿರುವ ಹಳ್ಳಿಗಳು ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ.
ಇದನ್ನೂ ಓದಿ:
10 ಜಿಲ್ಲೆಗಳು ಹೈ ಅಲರ್ಟ್ನಲ್ಲಿ:
ಒಡಿಶಾದ ವಿಶೇಷ ಪರಿಹಾರ ಕಮಿಷನರ್ (SRC) ರಾಜೇಶ್ ಪ್ರಭಾಕರ್ ಪಾಟೀಲ್ ಮಾಹಿತಿ ನೀಡಿ, ಮಹಾನದಿಯ ಕೆಳಭಾಗದಲ್ಲಿರುವ 10 ಜಿಲ್ಲೆಗಳನ್ನು ಅತ್ಯಂತ ಜಾಗರೂಕರಾಗಿ ಇರುವಂತೆ ಸೂಚಿಸಲಾಗಿದೆ ಎಂದಿದ್ದಾರೆ. ಜಿಲ್ಲಾಡಳಿತಗಳು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ನದಿಯ ಹತ್ತಿರ ಯಾರೂ ಹೋಗದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದೆ.



