ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಮಿತ ಬಳಕೆ ಹಾಗೂ ಇಂಧನ ಉಳಿತಾಯದ ಕರೆ ದೇಶದ ಹಿತದೃಷ್ಟಿಯಿಂದ ಮಾಡಿರುವ ಮನವಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ದೇವೇಗೌಡ, ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ದೇಶದ ಜನತೆಗೆ ಕೆಲ ಮಹತ್ವದ ಸಲಹೆಗಳನ್ನು ನೀಡಿದ್ದರು. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಆರ್ಥಿಕ ಹಾಗೂ ಇಂಧನ ಕ್ಷೇತ್ರದ ಮೇಲೆ ಒತ್ತಡ ಉಂಟಾಗಿದೆ. ಇದೇ ಕಾರಣದಿಂದ ಜನರು ಸಂಪನ್ಮೂಲಗಳನ್ನು ಜಾಗರೂಕತೆಯಿಂದ ಬಳಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:
ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಜಾಗತಿಕ ಮಟ್ಟದಲ್ಲಿ ಹಲವು ದುಷ್ಪರಿಣಾಮಗಳನ್ನು ಉಂಟುಮಾಡಿದೆ. ತೈಲ ಬೆಲೆ ಏರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅದರ ಪರಿಣಾಮ ಕಾಣಿಸುತ್ತಿದೆ. ಇಂತಹ ಸಂದರ್ಭದಲ್ಲಿ ಜನರು ಅನಗತ್ಯ ಖರ್ಚು ಮತ್ತು ಬಳಕೆಯನ್ನು ನಿಯಂತ್ರಿಸಬೇಕು ಎಂಬುದೇ ಪ್ರಧಾನಿ ಮೋದಿ ಸಂದೇಶದ ಉದ್ದೇಶ ಎಂದು ದೇವೇಗೌಡ ಅಭಿಪ್ರಾಯಪಟ್ಟರು.
ದೇಶದ ಜನರು ಜವಾಬ್ದಾರಿಯಿಂದ ನಡೆದುಕೊಂಡರೆ ಯಾವುದೇ ಸಂಕಷ್ಟವನ್ನೂ ಸಮರ್ಥವಾಗಿ ಎದುರಿಸಬಹುದು. ಪ್ರಧಾನಿ ನೀಡಿರುವ ಸಲಹೆಯನ್ನು ಎಲ್ಲರೂ ಸ್ವಾಗತಿಸಿ ಪಾಲಿಸಬೇಕು ಎಂದು ಅವರು ಕರೆ ನೀಡಿದರು.



