ರಾಜ್ಯದಲ್ಲಿ ಪ್ರಥಮ ಬಾರಿಗೆ ಇತರೆ ಪಾರಂಪರಿಕರ ಅರಣ್ಯ ವಾಸಿಗಳಿಗೆ ಹಕ್ಕುಪತ್ರ ವಿತರಣೆ

ಹೊಸದಿಗಂತ ವರದಿ,ಮಡಿಕೇರಿ:

ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಕಾಯ್ದೆಯಡಿ ಸೋಮವಾರಪೇಟೆ ತಾಲೂಕಿನ ಬೇಳೂರು ಗ್ರಾ.ಪಂ.ವ್ಯಾಪ್ತಿಯ ಬಜೆಗುಂಡಿಯ ಸುಮಾರು 290 ಕುಟುಂಬಗಳಿಗೆ ಹಕ್ಕುಪತ್ರವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿತರಿಸಿದರು.
ಸೋಮವಾರಪೇಟೆ ತಾಲೂಕಿನ ಬೇಳೂರು ಗ್ರಾ.ಪಂ.ಮತ್ತು ಬಜೆಗುಂಡಿ ಅರಣ್ಯ ಹಕ್ಕು ಸಮಿತಿ ವತಿಯಿಂದ ಬೇಳೂರು ಶಾಲಾ ಆವರಣದಲ್ಲಿ ಸೋಮವಾರ ಹಕ್ಕುಪತ್ರ ವಿತರಿಸಲಾಯಿತು.
ಹಕ್ಕುಪತ್ರ ವಿತರಣೆಗೂ ಮೊದಲು ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ರಾಜ್ಯದಲ್ಲಿ ಪ್ರಥಮ ಬಾರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಅನುಸೂಚಿತ ಬುಡಕಟ್ಟು ಹಾಗೂ ಇತರೆ ಪಾರಂಪರಿಕರ ಅರಣ್ಯ ವಾಸಿಗಳ ಕಾಯ್ದೆಯಡಿ ಒಟ್ಟು 290 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿರುವುದು ದಾಖಲೆಯೇ ಸರಿ ಎಂದು ತಿಳಿಸಿದರು.
‘ಊರುಡುವೆ ಅಥವಾ ಪೈಸಾರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಇದುವರೆಗೆ ಹಕ್ಕುಪತ್ರ ಸಿಗದಿದ್ದಲ್ಲಿ ಮಾರ್ಚ್ 31 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದ್ದು, 94ಸಿ ಮತ್ತು 94ಸಿಸಿ ರಡಿ ಹಕ್ಕುಪತ್ರ ಪಡೆಯಲು ಅವಕಾಶವಿದೆ. ಆ ನಿಟ್ಟಿನಲ್ಲಿ ಅರ್ಜಿ ಸಲ್ಲಿಸುವಂತಾಗಬೇಕು ಎಂದು ತಿಳಿಸಿದರು.
ಹಿಂದಿನ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪ ಅವರು ವಿಧಾನಸಭಾ ಅಧ್ಯಕ್ಷರು ಹಾಗೂ ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲಿ ಹಲವು ದಶಕಗಳಿಂದ ವಾಸ ಮಾಡುತ್ತಿರುವ ಬಡವರಿಗೆ ಹಕ್ಕುಪತ್ರ ವಿತರಿಸುವಂತಾಗಬೇಕು ಎಂದು ಸದನದಲ್ಲಿ ಗಮನ ಸೆಳೆಯಲಾಗಿತ್ತು. ಆ ನಿಟ್ಟಿನಲ್ಲಿ ಬಡ ಜನರು ವಾಸಿಸುವ ಜಾಗದಲ್ಲಿ ಹಕ್ಕುಪತ್ರ ನೀಡಲು ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ ಎಂದು ಶಾಸಕರು ಹೇಳಿದರು.
‘ಪ್ರತೀ ಗ್ರಾ.ಪಂ.ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಸಮಿತಿ ರಚನೆಯಾಗಬೇಕು. ಹಲವು ದಶಕಗಳಿಂದ ವಾಸ ಮಾಡುತ್ತಿರುವ ಬಡ ಜನರಿಗೆ ಹಕ್ಕುಪತ್ರ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬಡಜನರಿಗೆ ಉಪಕಾರ ಮಾಡಬೇಕು ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ನುಡಿದರು.’
ಹಲವು ಸಾಮಾಜಿಕ ಕಾರ್ಯಗಳಲ್ಲಿ ಹಕ್ಕುಪತ್ರ ನೀಡುವ ಕಾರ್ಯವು ತೃಪ್ತಿದಾಯಕವಾಗಿದೆ. ಕೂಲಿ ಕಾರ್ಮಿಕರು, ಬಡವರಿಗೆ ಒಳ್ಳೆಯದು ಮಾಡಬೇಕು ಎಂಬ ಉದ್ದೇಶದಿಂದ ಅಧಿಕಾರಿಗಳು ಬಡವರ, ನಿರ್ಗತಿಕರ ಕೆಲಸವನ್ನು ಪ್ರಥಮ ಆದ್ಯತೆ ಮೇಲೆ ನಿರ್ವಹಿಸಬೇಕಿದೆ ಎಂದು ಶಾಸಕರು ಹೇಳಿದರು.
ಬಜೆಗುಂಡಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕೆಲಸಗಳಿಗೆ 25 ಕೋಟಿ ರೂ.ಗೂ ಹೆಚ್ಚು ಹಣ ಒದಗಿಸಲಾಗಿದೆ. ಕಾಂಕ್ರೀಟ್ ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಕುಡಿಯುವ ನೀರು ಮತ್ತಿತರ ಮೂಲ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕಸ ವಿಲೇವಾರಿ ಮತ್ತು ಸ್ಮಶಾನಕ್ಕೆ ಭೂಮಿಯನ್ನು ಶೀಘ್ರ ಒದಗಿಸಲಾಗುವುದು ಎಂದರು.
ಹಕ್ಕುಪತ್ರವನ್ನು ಯಾರೂ ಸಹ ಮಾರಿಕೊಳ್ಳಬಾರದು. ಮನೆ ನಿರ್ಮಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡಜನರ ಶ್ರೇಯೋಭಿವೃದ್ಧಿಗೆ ಹಲವು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಪ್ರಮುಖವಾಗಿ ಕೋವಿಡ್-19 ತಡೆಯುವಲ್ಲಿ ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಇಂದಿನಿಂದ 60 ವರ್ಷ ಮೇಲ್ಪಟ್ಟ ಮತ್ತು ಎರಡನೇ ಡೋಸ್ ಪಡೆದು 9 ತಿಂಗಳಾದವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು, ಲಸಿಕೆಯನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಸಾಸಕರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.
ರಾಷ್ಟ್ರದಲ್ಲಿ ಕೋವಿಡ್ ಲಸಿಕೆ ಮತ್ತು ಕೋವಿಡ್ ಪರೀಕ್ಷೆ ಉಚಿತವಾಗಿ ನೀಡಲಾಗುತ್ತಿದೆ. ಈ ಸೌಲಭ್ಯ ಅಮೇರಿಕಾ ರಾಷ್ಟ್ರದಲ್ಲಿಯೂ ಇಲ್ಲ ಎಂದು ಅವರು ತಿಳಿಸಿದರು.
ಗ್ರಾಮಗಳ ಅಭಿವೃದ್ಧಿ ಸಂಬಂಧಿಸಿದಂತೆ ಗ್ರಾ.ಪಂ.ಮಟ್ಟದಲ್ಲೂ ಸಹ ಕಂದಾಯ ಪಾವತಿಸುವಂತಾಗಬೇಕು ಎಂದು ಶಾಸಕರು ಹೇಳಿದರು.
ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, ತಲತಲಾಂತರದಿಂದ ಅರಣ್ಯ ಪ್ರದೇಶದಲ್ಲಿ ವಾಸ ಮಾಡುತ್ತಿರುವರಿಗೆ ಶಾಸಕರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದ 290 ಕುಟುಂಬದವರಿಗೆ ಹಕ್ಕುಪತ್ರ ವಿತರಿಸಲಾಗಿದೆ. ಬಡ ಜನರಲ್ಲಿ ಇದ್ದ ಆತಂಕ ನಿವಾರಣೆಯಾಗಿದೆ ಎಂದು ಹೇಳಿದರು.
ಪೈಲಟ್ ಮಾದರಿ ಅನುಷ್ಠಾನ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಸ್ವಾಮಿತ್ವ’ ಕಾರ್ಯಕ್ರಮ ಜಾರಿಗೊಳಿಸಿದ್ದು, ಇದನ್ನು ಪೈಲಟ್ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಶಾಸಕರ ಪ್ರಯತ್ನದಿಂದ ‘ಮಡಿಕೇರಿ ವೈದ್ಯಕೀಯ ಕಾಲೇಜು, ಕುಶಾಲನಗರದಲ್ಲಿ ಎಂಜಿನಿಯರಿಂಗ್ ಕಾಲೇಜು, ಚಿಕ್ಕ ಅಳುವಾರದಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆ ಆಗಿದೆ ಎಂಬುದನ್ನು ಯಾರೂ ಸಹ ಮರೆಯುವಂತಿಲ್ಲ. ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜು ಇಲ್ಲದಿದ್ದರೆ ಊಹಿಸಿಕೊಳ್ಳುವುದು ಕಷ್ಟಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ಹಲವು ಅಭಿವೃದ್ಧಿ ಕಾರ್ಯಕೈಗೊಂಡಿದ್ದಾರೆ ಎಂದು ಸಂಸದರು ಶ್ಲಾಘಿಸಿದರು.’
ರಾಜ್ಯದಲ್ಲೇ‌ ಫ್ರಥಮ: ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಇತರೆ ಪಾರಂಪರಿಕ ಅರಣ್ಯ ವಾಸಿಗಳ ಕಾಯ್ದೆಯಡಿ 290 ಕುಟುಂಬಗಳಿಗೆ ಹಕ್ಕುಪತ್ರ ನೀಡುತ್ತಿರುವುದು ಇಡೀ ರಾಜ್ಯದಲ್ಲಿ ಪ್ರಥಮ ಎಂದರೆ ಅತಿಶಯೋಕ್ತಿಯಲ್ಲ ಎಂದು ಹೇಳಿದರು.
ವಸತಿ, ಕಸವಿಲೇವಾರಿಗೆ ಜಾಗ, ಸ್ಮಶಾನಕ್ಕೆ ಭೂಮಿ, ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಅಗತ್ಯವಾಗಿ ಬೇಕಿರುವ ಗ್ರಾಮಗಳಿಗೆ ಮೂಲ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಅವರ ವಿಶೇಷ ಕಾಳಜಿ ಮತ್ತು ಪ್ರಯತ್ನ ಹಾಗೂ ಹಿಂದಿನ ಜಿಲ್ಲಾಧಿಕಾರಿಯವರು ಮತ್ತು ಐಟಿಡಿಪಿ ಇಲಾಖೆ ಅಧಿಕಾರಿಯವರು ಅರಣ್ಯ ಹಕ್ಕುಪತ್ರ ನೀಡಲು ಹೆಚ್ಚಿನ ಕಾಳಜಿ ವಹಿಸಿದ್ದಾರೆ ಎಂದು ಶೇಖರ್ ಅವರು ತಿಳಿಸಿದರು.
ಹಕ್ಕುಪತ್ರ ವಂಚಿತರಾಗಿರುವವರು ಗ್ರಾಮದಲ್ಲಿ ಅರಣ್ಯ ಹಕ್ಕು ಸಮಿತಿಗೆ ಮನವಿ ಸಲ್ಲಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ತಹಶೀಲ್ದಾರ್ ಗೋವಿಂದರಾಜು ಅವರು ಮಾತನಾಡಿ ಕೊಡ್ಲಿಪೇಟೆ, ಶನಿವಾರಸಂತೆ ಮತ್ತಿತರ ಕಡೆಗಳಲ್ಲಿ ವಸತಿ, ನಿವೇಶನ, ಸ್ಮಶಾನ ಭೂಮಿ, ಕಸ ವಿಲೇವಾರಿಗೆ ಜಾಗ ಒದಗಿಸಲು ಶಾಸಕರು ಶ್ರಮಿಸಿದ್ದಾರೆ. ಶಾಸಕಾಂಗ, ಕಾರ್ಯಾಂಗಗಳು ಒಟ್ಟುಗೂಡಿದರೆ ಜನಪರ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಹೇಳಿದರು.
ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ತಿಮ್ಮಪ್ಪ ನಾಯಕ್, ಪ್ರಮುಖರಾದ ಅಭಿಮನ್ಯು ಕುಮಾರ್, ಗ್ರಾ.ಪಂ. ಅಧ್ಯಕ್ಷ ಬಿ.ಎಂ.ಪ್ರಶಾಂತ್, ಅರಣ್ಯ ಹಕ್ಕು ಸಮಿತಿಯ ಸದಸ್ಯ ಪ್ರಶಾಂತ್, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ.ನ ಜಯಣ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಪಿಡಿಒ ಅಂಜನಾದೇವಿ, ಭಾಗ್ಯಲಕ್ಷ್ಮಿ, ಪಿ.ಕೆ.ಚಂದ್ರು, ಯಾಕೂಬ್ ಇತರರು ಇದ್ದರು. ಸೋಮೇಶ ಅವರು ಸ್ವಾಗತಿಸಿ, ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮೊದಲು ಬಜೆಗುಂಡಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!