ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿಗೆ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ.
ಬಿಗ್ ಬಾಸ್ ಸ್ಪರ್ಧಿಯಾಗಿ ಗುರುತಿಸಿಕೊಂಡಿರುವ ಸತೀಶ್ ಅಲಿಯಾಸ್ ‘ಡಾಗ್ ಸತೀಶ್’ ನೀಡಿದ ದೂರಿನ ಆಧಾರದಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 351 ಮತ್ತು 352 ಅಡಿಯಲ್ಲಿ ರಜತ್ ಹಾಗೂ ಅವರ ಸ್ನೇಹಿತ ಧನರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸತೀಶ್ ನೀಡಿದ ದೂರಿನಲ್ಲಿ, ಕಳೆದ ವರ್ಷ ಡಿಸೆಂಬರ್ 12ರಂದು ರಜತ್ ತಮ್ಮನ್ನು ಸಂಪರ್ಕಿಸಿ ಹೊಸ ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿರುವುದಾಗಿ ತಿಳಿಸಿ, ಆರಂಭಿಕ ಕಾರ್ಯಕ್ರಮವಾಗಿ ಸಂದರ್ಶನ ನೀಡುವಂತೆ ಕೇಳಿಕೊಂಡಿದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಸಂದರ್ಶನವನ್ನು ಎರಡು ಕ್ಯಾಮೆರಾ ಹಾಗೂ ಎರಡು ಮೊಬೈಲ್ ಫೋನ್ಗಳ ಮೂಲಕ ನಾಲ್ವರು ಸೇರಿ ಚಿತ್ರೀಕರಿಸಿದ್ದರು. ಆದರೆ ನಂತರ ವಿಡಿಯೋವನ್ನು ಅಪ್ಲೋಡ್ ಮಾಡುವ ವೇಳೆ ತಮ್ಮ ಮಾತುಗಳನ್ನು ತಿರುಚಿ ಪ್ರಸಾರ ಮಾಡಿ ಅವಮಾನಿಸಲಾಗಿದೆ ಎಂದು ಸತೀಶ್ ಆರೋಪಿಸಿದ್ದಾರೆ.
ಇದಲ್ಲದೆ ಫೆಬ್ರವರಿ 27ರಂದು ರಾತ್ರಿ 10.30ರ ವೇಳೆಗೆ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಾಕಿದ ಬಳಿಕ ರಜತ್ ತನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಧ್ಯರಾತ್ರಿ ಸಮಯದಲ್ಲೂ ಫೋನ್ ಮೂಲಕ ಬೆದರಿಕೆ ಕರೆಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.
ಈ ಎಲ್ಲ ಘಟನೆಗಳಿಂದ ಮಾನಹಾನಿ ಉಂಟಾಗಿದೆ ಎಂದು ಹೇಳಿರುವ ಸತೀಶ್, ರಜತ್ ಮತ್ತು ಧನರಾಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.



