ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶ್ರದ್ಧಾಂಜಲಿ ಸಲ್ಲಿಸಿದೆ.
ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು ಕ್ಷೇತ್ರೀಯ ಸಂಘ ಚಾಲಕ ಡಾ.ಪಿ.ವಾಮನ್ ಶೆಣೈ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಸಂತಾಪ ಸೂಚಿಸಿದ್ದಾರೆ.
ಪದ್ಮವಿಭೂಷಣ ಶ್ರೀ ಎಸ್. ಎಂ. ಕೃಷ್ಣ ಅವರು ವಿಧಿವಶರಾದ ಸುದ್ದಿ ಅತೀವ ದುಃಖವನ್ನುಂಟುಮಾಡಿದೆ. ಮುತ್ಸದ್ಧಿ ರಾಜಕಾರಣಿಯಾಗಿ, ನಾಡಿನ ಜನಪ್ರಿಯ ಮುಖ್ಯಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕರ್ನಾಟಕ ವಿಧಾನ ಪರಿಷತ್ ಸ್ಪೀಕರ್ ಆಗಿ ರಾಜಕೀಯ ರಂಗದಲ್ಲಿ ಮೇರು ವ್ಯಕ್ತಿತ್ವವಾಗಿದ್ದ ಎಸ್.ಎಂ. ಕೃಷ್ಣ ಅವರು ಸರಳ ವ್ಯಕ್ತಿತ್ವ ಹಾಗೂ ಆತ್ಮೀಯತೆಯ ಸ್ವಭಾವದಿಂದ ಅಪಾರ ಜನಮನ್ನಣೆಗಳಿಸಿದ್ದರು. ಹೊಸಚಿಂತನೆಗಳ ಅನೇಕ ಜನಸ್ನೇಹಿ ಅಭಿವೃದ್ಧಿ ಯೋಜನೆಗಳ ಮೂಲಕ ನಾಡಿನ ವಿಕಾಸಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ. ಸುಮಾರು ಆರು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ತಮ್ಮ ದೂರದೃಷ್ಟಿತ್ವ, ನಾಯಕತ್ವ, ದಕ್ಷ ಆಡಳಿತದಿಂದ ಎಲ್ಲರಿಗೂ ಮಾದರಿಯಾದವರು ಎಂದು ಆರ್ಎಸ್ಎಸ್ ಹೇಳಿಕೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆಗೆ ಅವರು ನಿಕಟ ಬಾಂಧವ್ಯ ಹೊಂದಿದ್ದರು. ಸಂಘವು ಅವರ ನಿಧನಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಮತ್ತು ಅಗಲಿದ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.