ಹೊಸದಿಗಂತ ವರದಿ, ಕಾರವಾರ :
ಬಡವರ ಶಿಕ್ಷಣಕ್ಕೆ ಕಾರವಾರ ಜೊಯಿಡಾ ಭಾಗಗಳಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಶೈಕ್ಷಣಿಕ ಕ್ರಾಂತಿಗೆ ಕಾರಣರಾಗಿದ್ದ ಮಾಜಿ ಸಚಿವ
ಪ್ರಭಾಕರ ರಾಣೆ(81) ಅವರು ಸೋಮವಾರ ಮದ್ಯಾಹ್ನ ನಿಧನರಾದರು.
ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಜಿಲ್ಲಾ ಆಸ್ಪತ್ರೆಯ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇತ್ತೀಚೆಗೆ ಮನೆಯಲ್ಲಿ ಔಷೋಧೋಪಚಾರ ಪಡೆಯುತ್ತಿದ್ದರು.
ಕಾರವಾರ ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ನಂತರ ರಾಜಕೀಯ ರಂಗ ಪ್ರವೇಶಿಸಿ ಕಾಂಗ್ರೆಸ್ ಪಕ್ಷದಿಂದ ಕಾರವಾರ ಜೊಯಿಡಾ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಅವಧಿಗೆ ಶಾಸಕರಾಗಿ ಆಯ್ಕೆಗೊಂಡಿದ್ದರು.
1993 ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಸಾಕ್ಷರತೆ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ ಅವರು ಭಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಆರಂಭಿಸಿ ಬಡ ಕುಟುಂಬಗಳ ಹಲವಾರು ಮಕ್ಕಳ ಶೈಕ್ಷಣಿಕ ಅಗತ್ಯತೆ ಪೂರೈಸುವ ಕಾರ್ಯ ಮಾಡಿದ್ಧರು.
ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದ ಅವರು ಒಬ್ಬ ಉತ್ತಮ ಸಮಾಜ ಸೇವಕ ಸರಳ ಜೀವಿಯಾಗಿ ಗುರುತಿಸಿಕೊಂಡಿದ್ದರು.
ಪ್ರಭಾಕರ ರಾಣೆ ಅವರ ನಿಧನಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್,ಮಾಜಿ ಶಾಸಕ ಸತೀಶ ಸೈಲ್, ಮಾಜಿ ಸಚಿವ ಆನಂದ ಅಸ್ನೋಟಿಕರ್, ಆರ್. ವಿ.ದೇಶಪಾಂಡೆ ಮೊದಲಾದವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.