ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ನಡೆದಿದೆ.
ಪ್ರಾಥಮಿಕ ತನಿಖೆಯಲ್ಲಿ ಮೃತರನ್ನು ಠಾಗೂರ್ (21), ವಸಂತ್ (19), ಆರ್ಯನ್ (18), ಪವನ್ (19) ಎಂದು ಗುರುತಿಸಲಾಗಿದೆ.
ಬೆಂಗಳೂರು ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ತೆರಳುತ್ತಿದ್ದ ಇವರಿದ್ದ ವೋಕ್ಸ್ವ್ಯಾಗನ್ ಪೋಲೋ ಕಾರು ಹೆದ್ದಾರಿಯ ಅಮಾನಿ ಗೋಪಾಲಕೃಷ್ಣ ಕೆರೆಯ ಬಳಿ ನಿಯಂತ್ರಣ ತಪ್ಪಿ ನೀರಿನ ಗುಂಡಿಗೆ ಉರುಳಿ ಬಿದ್ದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ಸಂಚಾರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಕಾರನ್ನು ಹೊರಕ್ಕೆ ತೆಗೆದರಾದರೂ ಈ ವೇಳೆಗಾಗಲೇ ಮೂವರು ಸಾವನ್ನಪ್ಪಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಠಾಗೂರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ.
ಚಿಕ್ಕಬಳ್ಳಾಪುರ ಸಂಚಾರ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.