ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ: ಗೊಂದಲ, ವದಂತಿ ಮಾಹಿತಿ ಹಂಚಿದ್ರೇ ಕಾನೂನು ಕ್ರಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾ.29ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ದ್ವಿತೀಯ ಪಿಯು ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರಲ್ಲಿ ಗೊಂದಲ, ವದಂತಿ ಕೆಲ ಮಾಹಿತಿ ಹಂಚಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮಾ.9 ರಿಂದ 29ರವರೆಗೆ ನಡೆಯಲಿದೆ. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿರುವುದಾಗಿ ತಿಳಿಸಿದೆ.

ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ನಿಗಾ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಪೊಲೀಸ್ ಭದ್ರತೆ  ಕೈಗೊಳ್ಳಲಾಗಿದೆ. ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ಅವರ ಚಲನವಲನಗಳ ಮೇಲೆ ಸೂಕ್ತ ನಿಗಾವಹಿಸಲಾಗಿದೆ ಎಂದು ಹೇಳಿದೆ.

ಹೆಚ್ಚಿನ ನಿಗಾವನ್ನು ಟ್ಯೂಷನ್ ಸೆಂಟರ್, ಕೋಚಿಂಗ್ ಕೇಂದ್ರಗಳು, ಜೆರಾಕ್ಸ್ ಅಂಗಡಿಗಳು, ಸೈಬರ್ ಕೇಂದ್ರ, ಕಂಪ್ಯೂಟರ್ ಕೇಂದ್ರ ಹಾಗೂ ಗೇಮ್ಸ್ ಸೆಂಟರ್ ಗಳ ಮೇಲೆ ವಹಿಸಲಾಗಿದೆ ಎಂದು ತಿಳಿಸಿದೆ.

ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳಲ್ಲಿ ಬಳಸಿರುವ ಪ್ರಶ್ನೆ ಪತ್ರಿಕೆಗಳು, ಪ್ರಶ್ನೆಪತ್ರಿಕೆಗಳ ಕೈಬರಹಗಳು, ಪ್ರಶ್ನೆಪತ್ರಿಕೆಗಳ ತುಣುಕುಗಳು, ಕೈಬರಹದ ಪ್ರಶ್ನೆಗಳು, ಪ್ರಶ್ನೋತ್ತರಗಳನ್ನು ಹಂಚುವ ಮತ್ತು ವಾಟ್ಸಾಪ್ ಇತ್ಯಾದಿ ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸುವಂತಿಲ್ಲ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರರಲ್ಲಿ ವದಂತಿ, ಗೊಂದಲ, ಸಂದೇಹಗಳಿಗೆ ಅವಕಾಶ ಕಲ್ಪಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!