ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.
ಗಾಲಿ ಜನಾರ್ಧನ ರೆಡ್ಡಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣವು ಕರ್ನಾಟಕದ ರಾಜಕೀಯ ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಒಬುಲಾಪುರಂ ಗಣಿಗಾರಿಕೆ ಕಂಪನಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಯವರನ್ನು ಸಿಬಿಐ ಕೋರ್ಟ್ ಮೇ 6 ರಂದು ಸುದೀರ್ಘ ವರ್ಷಗಳ ತನಿಖೆಯ ನಂತರ ದೋಷಿಯೆಂದು ಘೋಷಿಸಿತ್ತು.