ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪುಣ್ಯ ನದಿಗಳಲ್ಲಿ ಒಂದಾದ ಗಂಗೆ ಹಾಗೂ ಯಮುನೆಗೆ ಪೂಜೆ ಸಲ್ಲಿಸುವ ಕುರಿತು ತಮ್ಮ ಪ್ರತಿಕ್ರಿಯೆ ನೀಡುವ ಕುರಿತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಹಾಗೂ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ಈ ನದಿಗಳಲ್ಲಿ ಪೂಜೆ ಸಲ್ಲಿಸುವ ವೇಳೆ ಹೂವು ಹಾಗೂ ಹೂಮಾಲೆಗಳನ್ನು ಎಸೆಯಲಾಗುತ್ತಿರವ ಕಾರಣ ಮಾಲಿನ್ಯ ಉಂಟಾಗುತ್ತಿದೆ ಎಂಬ ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಆಧಾರವಾಗಿಟ್ಟು ನ್ಯಾಯ ಮಂಡಳಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ.
ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಡಿಪಿಸಿಸಿ ಪರ ವಕೀಲರು ಈ ಸಮಸ್ಯೆಯ ಬಗ್ಗೆ ಸಮಿತಿಯ ಪ್ರತಿಕ್ರಿಯೆಯನ್ನು ನೀಡಲು ವಿಫಲರಾಗಿದ್ದಾರೆ ಎಂದು ಹೇಳಿತಲ್ಲದೆ, ನಾಲ್ಕು ವಾರಗಳಲ್ಲಿ ಹೊಸದಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಜು.3ಕ್ಕೆ ಮುಂದೂಡಿದೆ.