ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಕಾಲದಲ್ಲಿ ‘ಕೂಲ್ ಸಿಟಿ’ ಎಂದು ಹೆಸರಾಗಿದ್ದ ಬೆಂಗಳೂರು ಈಗ ‘ಹಾಟ್ ಸಿಟಿ’ಯಾಗಿ ಬದಲಾಗಿದೆ. ಏರುತ್ತಿರುವ ತಾಪಮಾನಕ್ಕೆ ಬೆಂಗಳೂರಿಗರು ಅಕ್ಷರಶಃ ಹೈರಾಣಾಗಿದ್ದಾರೆ. ಇಂದು ನಗರದಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಮುಂಜಾನೆಯಿಂದಲೇ ಸೂರ್ಯನ ಪ್ರಖರತೆ ಜನರನ್ನು ಸುಡುತ್ತಿದೆ. ರಾತ್ರಿಯಾದರೂ ಬಿಸಿ ಗಾಳಿಯ ಅಬ್ಬರ ಕಡಿಮೆಯಾಗುತ್ತಿಲ್ಲ.
ಈ ತೀವ್ರವಾದ ಸೆಖೆಯಿಂದಾಗಿ ಆಸ್ಪತ್ರೆಗಳಲ್ಲಿ ನಿರ್ಜಲೀಕರಣ, ಸುಸ್ತು, ಚರ್ಮದ ಅಲರ್ಜಿ ಮತ್ತು ಅಜೀರ್ಣದಂತಹ ಸಮಸ್ಯೆಗಳಿಂದ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ.
ಆರೋಗ್ಯ ಇಲಾಖೆಯ ಪ್ರಮುಖ ಸೂಚನೆಗಳು:
ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಬಿಸಿಲಿಗೆ ಹೋಗಬೇಡಿ.
ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು.
ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಸದಾ ನೀರು ಅಥವಾ ದ್ರವಾಹಾರ ಸೇವಿಸುತ್ತಿರಬೇಕು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, “ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ,” ಎಂದು ತಿಳಿಸಿದ್ದಾರೆ.



