ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಭಾವಚಿತ್ರದ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದುಕೊಂಡವರಿಗೆ ಗಂಭೀರ ಗಾಯಗೊಳ್ಳುವಂತೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗಾಯಗಳಾಗಿರುವ ಕುರಿತ ಫೋಟೋ, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಬ್ಯಾನರ್ ಹಾಕಿರುವುದರ ವಿರುದ್ಧ ಮೇ 15ರಂದು ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಪುತ್ತೂರು ನಗರ ಠಾಣೆಯಲ್ಲಿ ಸರಕಾರಿ ಆಸ್ತಿ ದುರುಪಯೋಗ ಮತ್ತು ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿರುವುದಾಗಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಅದೇ ದಿನ ನರಿಮೊಗರು ಗ್ರಾಮ ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ವಶಕ್ಕೆ ಪಡೆದ ಪೊಲೀಸರು ಅನಂತರ ಅಭಿ, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷೀತ್, ಗುರುಪ್ರಸಾದ್ ಎಂಬವರನ್ನು ವಶಕ್ಕೆ ಪಡೆದಿದ್ದರು.
ವಿಚಾರಣೆ ವೇಳೆ ವಶಕ್ಕೆ ಪಡೆದವರಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಪೊಲೀಸರು ಯಾರದೋ ಮಾತುಗಳನ್ನು ಕೇಳಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳೂ ನಡೆಯುತ್ತಿವೆ.