ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಜಿಲೆಟಿನ್ ಕಡ್ಡಿ ಪತ್ತೆಯಾದ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಕುರಿತು ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ಭೇಟಿ ಮುನ್ನವೇ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:
ಜಿಲೆಟಿನ್ ಕಡ್ಡಿ ಹಾಗೂ ಅದಕ್ಕೆ ಜೋಡಿಸಲು ಬಳಸುವ ವೈಯರ್ ಪತ್ತೆಯಾಗಿರುವುದು ಗಂಭೀರ ವಿಷಯ. ಈ ವಸ್ತುಗಳು ಅಲ್ಲಿಗೆ ಹೇಗೆ ಬಂದವು, ಯಾರು ತಂದರು ಎಂಬುದರ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಪ್ರಧಾನಿ ಯಾವುದೇ ಪಕ್ಷದ ನಾಯಕ ಮಾತ್ರವಲ್ಲ, ದೇಶದ ನಾಯಕ. ಅವರ ಭದ್ರತೆಯಲ್ಲಿ ನಿರ್ಲಕ್ಷ್ಯ ನಡೆಯಬಾರದು ಎಂದು ಅವರು ಎಚ್ಚರಿಸಿದರು. ಇಂತಹ ಘಟನೆಗಳು ದೇಶದ ಭದ್ರತಾ ವ್ಯವಸ್ಥೆಯ ಮೇಲೆ ಪ್ರಶ್ನೆ ಹುಟ್ಟಿಸುತ್ತವೆ. ಆದ್ದರಿಂದ ಪ್ರಕರಣವನ್ನು ರಾಷ್ಟ್ರೀಯ ಮಟ್ಟದಲ್ಲಿ ತನಿಖೆ ಮಾಡಿ ಸತ್ಯ ಹೊರತರುವುದು ಅಗತ್ಯ ಎಂದು ಅವರು ಆಗ್ರಹಿಸಿದರು.



