ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೋಂತಿಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೋಂತಿಮಾರು ಪಡ್ಪು ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ಆರೋಪಿಯಾಗಿದ್ದು, ಕೃತ್ಯ ನಡೆಸಿದ ಬಳಿಕ ಆತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂತಿಮಾರು ಪಡ್ಪು ಎಂಬಲ್ಲಿ ಕಾಲೇಜ್ ಗೆ ತೆರಳಲು ಬಸ್ ನಿಲ್ದಾಣದಲ್ಲಿ ಬಾಲಕಿ ಬಸ್ ಗೆ ಕಾಯುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಆರೋಪಿ ಏಕಾಏಕಿ ತಲೆ ಹಾಗೂ ಕೈಗಳಿಗೆ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ತಕ್ಷಣವೇ ಸ್ಥಳೀಯರು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಜೀವಾಪಾಯದಿಂದ ಪಾರಾಗಿದ್ದಾರೆ.



