ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದಾಗುವ ಉದ್ಯಮಿಗಳಿಗೆ ತಕ್ಷಣವೇ ಭೂಮಿ ಮಂಜೂರು ಮಾಡಲು ಅನುವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮಾಹಿತಿ ನೀಡಿದ್ದಾರೆ.
ಶನಿವಾರ ನಗರದಲ್ಲಿ ಆಯೋಜಿಸಿದ್ದ ಭಾರತೀಯ ಉತ್ಪಾದನಾ ಪ್ರದರ್ಶನದ ಕರ್ಟನ್ ರೈಸರ್ ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷದ ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ 2022ರ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶಕ್ಕೆ ದೇಶ-ವಿದೇಶಗಳಿಂದ ಉದ್ಯಮಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆಯಿಂದ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಗೆ ಅನುಗುಣವಾಗಿ ರಾಜ್ಯದ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜಿಸುವುದರ ಜೊತೆಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಗೆ ಅನುಗುಣವಾಗಿ ರಾಜ್ಯದ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜಿಸುತ್ತಿದೆ. ಜೊತೆಗೆ ರಾಜ್ಯ ಸರ್ಕಾರವು ಶೀಘ್ರದಲ್ಲೇ ಒಂದು ಜಿಲ್ಲೆ ಒಂದು ಉತ್ಪನ್ನ ನೀತಿಯನ್ನು ಜಾರಿಗೆ ತರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಉದ್ಯಮಿಗಳಿಗೆ ತತಕ್ಷಣವೇ ಭೂಮಿ, ನೀರು, ರಸ್ತೆ, ಸೇರಿದಂತೆ ವಿಶ್ವ ದರ್ಜೆಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾದರೆ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಿಗುವುದರ ಜೊತೆಗೆ ನಿರುದ್ಯೋಗ ನಿವಾರಣೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಸಮತೋಲಿತ ಕೈಗಾರಿಕೀಕರಣವನ್ನು ಉತ್ತೇಜಿಸಿಸಲು ನಾವು ತೆಗೆದುಕೊಂಡಿರುವ ಮತ್ತೊಂದು ಪ್ರಮುಖ ನಿರ್ಧಾರವೆಂದರೆ ಉತ್ಪನ್ನಗಳಿಗೆ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ರಚಿಸುವುದು. ಈ ಯೋಜನೆ ಮೂಲಕ ಹಲವು ಕೈಗಾರಿಕಾ ಸಮೂಹಗಳನ್ನು ಗುರುತಿಸಲಾಗಿದ್ದು, ಪ್ರತಿ ಕ್ಲಸ್ಟರ್ ನ ಉತ್ಪನ್ನ ವಲಯಕ್ಕೆ ನಿರ್ದಿಷ್ಟವಾದ ವಿಶೇಷ ಪ್ರೊತ್ಸಾಹ ಮತ್ತು ರಿಯಾಯಿತಿಗಳನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
3 ಬಿಲಿಯನ್ ಡಾಲರ್ ಮೊತ್ತದಲ್ಲಿ ದೇಶದ ಮೊಟ್ಟ ಮೊದಲ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರ ಹಾಗೂ ಐಎಸ್ಎಂಸಿ ಅನಲಾಗ್ ಪ್ರೈವೇಟ್ಲಿಮಿಟೆಡ್ ನಡುವೆ ಕಳೆದ ವಾರ ಒಪ್ಪಂದ ಏರ್ಪಟ್ಟಿದೆ. ಇದರಿಂದ ಒಟ್ಟು 1500 ಜನರಿಗೆ ಉದ್ಯೋಗ ಸಿಗಲಿದೆ. ಜೊತೆಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ 46,984 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಾರಾಯ ರಾಣೆ, ಏಸ್ ಮ್ಯಾನ್ಯುಕ್ಚರಿಂಗ್ ಸಿಸ್ಟಮ್ಸ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಪಿ.ರಾಮದಾಸ್, ಸ್ಯಾಸ್ಮೋಸ್ ಹೆಚ್ಇಟಿ ಟೆಕ್ನಾಲಜೀಸ್ ಲಿಮಿಟೆಡ್ನ ಸಂಸ್ಥಾಪಕ ಹೆಚ್ಜಿ.ಚಂದ್ರಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ