ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ಪ್ರಕರಣದ ಸಿಐಡಿ ತನಿಖೆಯನ್ನು ಹಿಂತೆಗೆದುಕೊಳ್ಳುವಂತೆ ತಮ್ಮ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯ ಲೋಪ ಮತ್ತು ಕರ್ತವ್ಯ ಲೋಪಗಳ ಬಗ್ಗೆ ಸಿಐಡಿ ತನಿಖೆಗೆ ನೀಡಿದ್ದ ಆದೇಶವನ್ನು ಕರ್ನಾಟಕ ಸರ್ಕಾರ ಘೋಷಿಸಿದ 24 ಗಂಟೆಗಳ ಒಳಗೆ ಹಿಂತೆಗೆದುಕೊಂಡಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರನ್ಯಾ ಮಲತಂದೆ ಡಿಜಿಪಿ ಶ್ರೇಣಿಯ ಅಧಿಕಾರಿ ಕೆ ರಾಮಚಂದ್ರ ರಾವ್ ಅವರ ಸಂಭಾವ್ಯ ಪಾತ್ರದ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರನ್ನು ನೇಮಿಸಲು ಆದೇಶಿಸಿರುವುದರಿಂದ, ಸಮಾನಾಂತರ ತನಿಖೆಯ ಅಗತ್ಯವಿಲ್ಲ ಎಂದು ಸಚಿವರು ಹೇಳಿದರು.
ಪೊಲೀಸ್ ಪ್ರೊಟೊಕಾಲ್ ಉಲ್ಲಂಘನೆ ಬಗ್ಗೆ ತಿಳಿದುಕೊಳ್ಳಲು ನಾನು ಸಿಐಡಿ ತನಿಖೆಗೆ ಆದೇಶಿಸಿದೆ. ಅಷ್ಟರೊಳಗಾಗಲೇ ಸಿಎಂ ಕಚೇರಿಯಿಂದ ಮೇಲ್ಮಟ್ಟದ ತನಿಖೆಗೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು ಎಂದು ಹೇಳಿದ್ದಾರೆ. ಎರಡು ಪ್ರತ್ಯೇಕ ತನಿಖೆಗಳು ನಡೆಯಬಾರದು ಎಂಬ ಕಾರಣಕ್ಕೆ ನಾವು ಹಿಂದೆ ಸರಿದ್ದೇವೆ ಎಂದು ಹೇಳಿದ್ದಾರೆ.