ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಮಾನವ- ವನ್ಯಜೀವಿ ಸಂಘರ್ಷದಿಂದ ತಾತ್ಕಾಲಿಕವಾಗಿ ಬಂದ್ ಆಗಿದ್ದ ಸಫಾರಿ ಇದೀಗ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ.
ತಜ್ಞರು, ಅಧಿಕಾರಿಗಳ ತಾಂತ್ರಿಕ ಸಮಿತಿ ವರದಿ ಅನ್ವಯ ಕ್ರಮ ಕೈಗೊಳ್ಳಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನ ಮತ್ತು ಸಾಗಣೆ ಸಾಮರ್ಥ್ಯ ಆಧರಿಸಿ ಹಸಿರು ನಿಶಾನೆ ನೀಡಲಾಗಿದೆ. ಈ ನಿರ್ಧಾರಿಂದ ಸ್ಥಳೀಯ ಉದ್ಯೋಗ, ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
ಮಾನವ ಹಾಗೂ ವನ್ಯಜೀವಿ ಸಂಘರ್ಷದಿಂದ ಸಫಾರಿಯನ್ನು 2025ರ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ 2026ರ ಫೆಬ್ರವರಿ 19ರಿಂದ ಶೇ.50ರ ಸಾಮರ್ಥ್ಯದಲ್ಲಿ ಮತ್ತು ಕಡಿಮೆ ಅವಧಿಯೊಂದಿಗೆ ಸಫಾರಿ ಪುನರಾರಂಭಕ್ಕೆ ಸರ್ಕಾರ ಅವಕಾಶ ನೀಡಿತ್ತು. ಇದೀಗ ಸಂಪೂರ್ಣವಾಗಿ ಅವಕಾಶ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಫಾರಿಗೆ ಜನ ಆಗಮಿಸುವ ನಿರೀಕ್ಷೆ ಇದೆ.



