ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದ ನಾಯಕ ರೋಹಿತ್ ಶರ್ಮ ವಿಶ್ವ ಕೆಲವೇ ದಿನಗಳಲ್ಲಿ ಕ್ರಿಕೆಟ್ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆದಿತ್ತು. ಅಲ್ಲದೆ ರೋಹಿತ್ಗೂ ಈ ಕುರಿತು ಮಾಧ್ಯಮದವರು ಪ್ರಶ್ನೆ ಕೇಳಿದ್ದರು. ಈ ಕುರಿತು ಸ್ವತಃ ರೋಹಿತ್ ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಮಾತನಾಡಿದ ರೋಹಿತ್, ನಾನು ನಿವೃತ್ತಿಯ ಬಗ್ಗೆ ಈಗಲೇ ಏನೂ ಯೋಚನೆ ಮಾಡಿಲ್ಲ. ಜೀವನವು ನಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪ್ರಸ್ತುತ ನಾನು ಚೆನ್ನಾಗಿ ಆಡುತ್ತಿದ್ದು, ಮುಂದಿನ ಕೆಲ ವರ್ಷಗಳ ಕಾಲ ಭಾರತ ಪರ ಟೆಸ್ಟ್ ಮತ್ತು ಏಕದಿನ ಆಡುವ ಯೋಜನೆಯಲ್ಲಿದ್ದೇನೆ ಎಂದು ಹೇಳುವ ತಮ್ಮ ನಿವೃತ್ತಿ ಕುರಿತ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
ಸದ್ಯ ರೋಹಿತ್ ವಿಶ್ರಾಂತಿಯಲ್ಲಿದ್ದು ಶ್ರೀಲಂಕಾ ವಿರುದ್ಧದ ಸರಣಿಗೂ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ನಾಯಕತ್ವದಲ್ಲಿ, ಜೂನ್ 29ರಂದು ಬಾರ್ಬಡೋಸ್ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು.
ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈಗಾಗಲೇ ಹೇಳಿಕೆ ನೀಡಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ರೋಹಿತ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.