ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಹಾಸನದಲ್ಲಿ ನಡೆದಿದೆ.
ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ತಾಯಿ ಕಮಲಮ್ಮ (70) ಹಾಗೂ ಮಗ ಸತೀಶ್ (40) ಮೃತ ದುರ್ದೈವಿಗಳು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೂಡ್ಸ್ ವಾಹನ ವೇಗವಾಗಿ ಬಂದಿದ್ದೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ಬೆನ್ನಲ್ಲೇ ಗೂಡ್ಸ್ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಬೆನ್ನಲ್ಲೇ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.