ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ.
ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.
ಇದೀಗ ಸಂಘದ ಸದಸ್ಯರೊಂದಿಗೆ ಕರ್ನಾಟಕ ಸರ್ಕಾರ ಮಾತುಕತೆ ನಡೆಸಿವೆ. 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ನಮ್ಮ ಬೇಡಿಕೆಯನ್ನು ಕಾಲಮಿತಿಯಲ್ಲಿ ಪೂರೈಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರ ಮೇಟಿ ತಿಳಿಸಿದ್ದಾರೆ. ಕಾಲಮಿತಿಯೊಳಗೆ ಬೇಡಿಕೆ ಪೂರ್ಣಗೊಳಿಸುವುದಾಗಿ ಸರಕಾರ ಹೇಳಿದೆ. ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದೂಡುತ್ತಿದ್ದೇವೆ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ ನಂತರ ತೀರ್ಮಾನಿಸುತ್ತೇವೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.



