ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು: ಸಚಿವ ಡಾ.ಜಿ.ಪರಮೇಶ್ವರ ಕರೆ

ಹೊಸದಿಗಂತ ವರದಿ ತುಮಕೂರು:

ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಕರೆ ನೀಡಿದರು.

ಇಂದು ಪಾವಗಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಸರಬರಾಜು, ಮುಂಗಾರು ಸಿದ್ದತೆ ಹಾಗೂ ಇತರೆ ಪ್ರಮುಖ ವಿಚಾರಗಳ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಜನರ ಸಮಗ್ರ ಕಲ್ಯಾಣಕ್ಕಾಗಿಯೇ ಸರ್ಕಾರವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಸರ್ಕಾರಿ ನೌಕರರು, ಯೋಜನೆಗಳ ಫಲಾನುಭವಿಗಳಿಂದ ಯಾವುದೇ ಫಲಾಪೇಕ್ಷೆ ಬಯಸದೇ ನಿಸ್ವಾರ್ಥವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಬಗ್ಗೆ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪಾವಗಡ ತಾಲ್ಲೂಕಿನ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸಮಗ್ರ ಮಾಹಿತಿ ಪಡೆದ ಸಚಿವರು ತಾಲೂಕಿನ ಎರಡು ಸಾವಿರ ರೈತರಿಗೆ ಹನಿ ನೀರಾವರಿ ಉಪಕರಣಗಳುನ್ನು ವಿತರಿಸುವಂತೆ ಸೂಚಿಸಿದರು.

ರೈತರಿಗೆ ಅನುಕೂಲ ವಾಗುವಂತೆ ಕೃಷಿ ಹೊಂಡಗಳ ನಿರ್ಮಾಣ ಮಾಡಿ, ಈಗಾಗಲೇ ನಿರ್ಮಾಣಗೊಂಡಿರುವ ಕೃಷಿ ಹೊಂಡಗಳ ಸಮರ್ಪಕ ಬಳಕೆಯಾಗುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವಂತೆ ಸೂಚಿಸಿದರು.

ತಾಲೂಕಿನ ಕೊಳವೆ ಬಾವಿಗಳಿಂದ ಫ್ಲೋರೈಡ್ ರಹಿತ ಶುದ್ಧ ಕುಡಿಯುವ ನೀರನ್ನು ವ್ಯತ್ಯಯವಾಗದಂತೆ ಪೂರೈಸಬೇಕು. ಜಲ ಜೀವನ್ ಅಭಿಯಾನದಡಿ ಜಿಲ್ಲೆಯಲ್ಲಿ ಅಳವಡಿಸಿರುವ ಪ್ಲಾಸ್ಟಿಕ್ ಪೈಪ್‌ಗಳು ಕಿತ್ತು ಬರುವಂತಿದ್ದು , ಅವುಗಳನ್ನು ಬದಲಿಸಿ ಸಧೃಡ ಕಬ್ಬಿಣ ಪೈಪ್ ಗಳ ಅಳವಡಿಸುವಂತೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ 15 ವಸತಿ ನಿಲಯದಲ್ಲಿ 1700 ಸಂಖ್ಯೆಯ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟು, ವಸತಿ ನಿಲಯದಲ್ಲಿ ಶುಚಿತ್ವ, ಆಹಾರ ಗುಣಮಟ್ಟ, ರಕ್ಷಣೆ ಬಗ್ಗೆ ನಿಗಾ ವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಜೂನ್ 11 ರಿಂದ 21ರ ವರೆಗೆ ಶಕ್ತಿ ಯೋಜನೆಯಡಿ ತಾಲೂಕಿನ 59375 ಮಹಿಳೆಯರು ಸದುಪಯೋಗ ಪಡಿಸಿಕೊಂಡಿರುವ ಮಾಹಿತಿ ಪಡೆದ ಸಚಿವರು ತಾಲೂಕಿನಲ್ಲಿರುವ ಕರ್ನಾಟಕ ಸಾರಿಗೆಯ 42 ಬಸ್ ಗಳ ಜೊತೆ ಅಗತ್ಯವಿರುವ ಕಡೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ಸರ್ಕಾರದ ನಿಯಾಮಾನುಸಾರ ತಾಲೂಕಿನ 62203 ಮಹಿಳಾ ಫಲಾನುಭವಿಗಳಿಗೆ ಸೌಲಭ್ಯವನ್ನು ದೊರಕಿಸಿಕೊಡುವಲ್ಲಿ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರಗೆ ಸೂಚಿಸಿದರು.

ರಸಗೊಬ್ಬರ ವಿತರಣೆ ಕೇಂದ್ರದಲ್ಲಿ ದರಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಪ್ರಕಟಿಸಿರುವ ಬಗ್ಗೆ ಖಚಿತ ಪಡಿಸಿಕೊಂಡು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹೆಚ್.ವಿ ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಸರ್ಕಾರಿ ಆಸ್ಪತ್ರೆಗಳು, ಅರಣ್ಯಿಕರಣ, ಲೋಕೋಪಯೋಗಿ ಇಲಾಖೆಯ ಕಾಮಗಾರಿ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್,ಉಪವಿಭಾಗಾಧಿಕಾರಿ ರಿಷಿಆನಂದ್ ಐ.ಎ.ಎಸ್. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರವಿ ಕೆ.ಹೆಚ್, ಎತ್ತಿನಹೊಳೆ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!