ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಮತ್ತು ಬೀದರ್ನಲ್ಲಿ ಸಿಇಟಿ ಪರೀಕ್ಷೆ ವೇಳೆ ನಡೆದ ಜನಿವಾರ ಪ್ರಕರಣವನ್ನು ಇಡೀ ರಾಜ್ಯವೇ ಖಂಡಿಸಿದ್ದು, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ತನಿಖೆ ನಡೆಸಿ ವರದಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ನೀಡಿದೆ.
ಈ ಬೆನ್ನಲ್ಲೇ ಶಾಲಾ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಶಿವಮೊಗ್ಗದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಡ್ಡಿ ಮಾಡಿದ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಜನಿವಾರ ತೆಗೆಯುವಂತಹ ನಿರ್ದೇಶನ ಯಾವ ಇಲಾಖೆಯಲ್ಲೂ ಕೊಡಲು ಅವಕಾಶವಿಲ್ಲ. ಎಲ್ಲ ಸಮುದಾಯಗಳನ್ನೂ ಗೌರವಿಸುವುದು ನಮ್ಮ ಸರ್ಕಾರದ ಧ್ಯೇಯ. ಬೀದರ್ನಲ್ಲಿ ಗಣಿತ ಪರೀಕ್ಷೆ ವಂಚಿತ ವಿದ್ಯಾರ್ಥಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.