ಹೊಸದಿಗಂತ ವರದಿ ಹುಬ್ಬಳ್ಳಿ:
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಈಗಾಗಲೇ ನಮ್ಮ ಸರ್ಕಾರ ಅವರ ನಡೆ ಖಂಡಿಸಿದ್ದು, ಮುಂದಿನ ನಡೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನದಲ್ಲಿ ಅವರು ನಡೆದುಕೊಂಡ ರೀತಿ ಸಂವಿಧಾನ ಬಾಹಿರವಾಗಿದೆ ಎಂದರು. ವಿಧಾನಸಭೆ, ವಿಧಾನಪರಿಷತ್ನ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಭಾಷಣ ಮಾಡುವುದು ಸಂಪ್ರದಾಯ. ಆದರೆ, ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಅದೊಂದನ್ನು ಬಿಟ್ಟು ಉಳಿದ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯಪಾಲರ ನಡೆಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ. ಇಲ್ಲಿ ಭಾವನೆಗಳಿಗೆ ಅವಕಾಶವಿಲ್ಲ, ಕರ್ತವ್ಯ ಮಾತ್ರ ನಿಭಾಯಿಸಬೇಕು. ಇಂತಹ ಘಟನೆ ರಾಜ್ಯದಲ್ಲಿ ಹಿಂದೆಂದೂ ನಡೆದಿಲ್ಲ ಎಂದರು.



