ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಹಗರಣದ ಹಿನ್ನಲೆಯಲ್ಲಿ ಸಚಿವರಾಗಿ ಬಿ. ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಈ ಕುರಿತು ಹೊರಡಿಸಲಾಗಿದ್ದ ಅಧಿಕೃತ ಅಧಿಸೂಚನೆಯನ್ನು ಭಾನುವಾರ ಬಿಡುಗಡೆಮಾಡಲಾಯಿತು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸಿದರು.
25 ದಿನಗಳಲ್ಲೇ ರಾಜೀನಾಮೆ
ಹಣ ದುರುಪಯೋಗದ ಆರೋಪಗಳ ಹಿನ್ನೆಲೆಯಲ್ಲಿ ನಾಗೇಂದ್ರ ಅವರು 2024ರ ಜೂನ್ನಲ್ಲಿ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮರುಸೇರ್ಪಡೆಗೊಂಡ 25 ದಿನಗಳಲ್ಲೇ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದರು.
ಇದನ್ನೂ ಓದಿ:
ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದ ಬಿ. ನಾಗೇಂದ್ರ
ಈ ಹಗರಣಕ್ಕೂ ನನಗು ಯಾವುದೇ ಸಂಬಂಧವಿಲ್ಲ, ಪಕ್ಷದ ಹಾಗೂ ಸರ್ಕಾರಕ್ಕೆ ಆಗುವ ಮುಜುಗರ ತಪ್ಪಿಸೋದಕ್ಕಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಹೇಳಿದರು.
ಬಿಜೆಪಿ, ಜೆಡಿಎಸ್ನಿಂದ ತೀವ್ರ ಒತ್ತಡ
ನಾಗೇಂದ್ರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಿರಂತರವಾಗಿ ಟೀಕೆ ಹಾಗೂ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿಯೂ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಈ ಒತ್ತಡಗಳ ಕಾರಣದಿಂದಲೂ ನಾಗೇಂದ್ರ ರಾಜೀನಾಮೆ ನೀಡಿರಬಹುದು ಎನ್ನುವ ಮಾತು ಕೂಡ ಕೇಳಿಬಂದಿದೆ.
ವಾಲ್ಮೀಕಿ ಹಗರಣ
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 2024ರ ಜುಲೈನಲ್ಲಿ ಕಾಂಗ್ರೆಸ್ ಶಾಸಕರನ್ನು ಬಂಧಿಸಿತ್ತು. ಅದೇ ವರ್ಷದ ಅಕ್ಟೋಬರ್ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತ್ತು.



