ಹೊಸದಿಗಂತ ವರದಿ, ಕಲಬುರಗಿ:
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ನೋಡಿಕೊಂಡು ಅತೀ ಶೀಘ್ರದಲ್ಲೇ ಕಾಲೇಜುಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.
ಅವರು ಶನಿವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ಪ್ರಕರಣವು ನ್ಯಾಯಾಲಯದಲ್ಲಿರುವದಕ್ಕೂ ಶಾಲಾ,ಕಾಲೇಜುಗಳ ಪ್ರಾರಂಭಕ್ಕೂ ಸಂಬಂಧವಿಲ್ಲ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದರು.
ಸೋಮವಾರದಿಂದ 9 ಮತ್ತು 10ನೇ ತರಗತಿಗಳು ಪ್ರಾರಂಭವಾಗುತ್ತವೆ. ಅದರಂತೆ ಕಾಲೇಜುಗಳು ಸಹ ಪ್ರಾರಂಭ ಆಗಲಿವೆ ಎಂದರು. ಈಗ ಆನಲೈನ್ ತರಗತಿಗಳು ನಡೆಯುತ್ತಿವೆ. ಹೀಗಾಗಿ ಗೃಹ ಇಲಾಖೆ ಸಲಹೆ ಮೇರೆಗೆ ಶೀಘ್ರದಲ್ಲೇ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದರು.
ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಹಿಜಾಬ್ ವಿವಾದ ಮಾಡುತ್ತಿದೆ ಎಂಬ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ವಿಚಾರದಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೆ ಎಂಬುವುದನ್ನು ಮಾಧ್ಯಮಗಳಿಗೆ ಗೊತ್ತಿದೆ ಎಂದರು.