ಹೊಸದಿಗಂತ ವರದಿ, ಕಾರವಾರ:
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ದೌರ್ಜನ್ಯ ಎಸಗುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಹೋರಾಟವನ್ನು ಹತ್ತಿಕ್ಕುತ್ತಿರುವುದು ಖಂಡನೀಯ. ಹೋರಾಟಗಾರರ ಮೇಲೆ ಲಾಠಿಪ್ರಹಾರ ನಡೆಸುವ ಮೂಲಕ ದಬ್ಬಾಳಿಕೆ ನಡೆಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಪಂಚಮಸಾಲಿ ಸಮುದಾಯಕ್ಕೆ 3ಬಿ ಮೀಸಲಾತಿ ನೀಡಲಾಗಿತ್ತು. ಈಗ ಅವರು 2ಎ ಮೀಸಲಾತಿಯನ್ನು ಕೇಳುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬೇಡಿಕೆ ಇಡುವುದು, ಬೇಡಿಕೆಗಾಗಿ ಪ್ರತಿಭಟನೆ ನಡೆಸುವುದರಲ್ಲಿ ತಪ್ಪೇನೂ ಇಲ್ಲ. ಆದರೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ ನಡೆಸಿ ಹೋರಾಟ ಹತ್ತಿಕ್ಕಲು ಸರ್ಕಾರ ನಡೆಸಿದ ಸರ್ವಾಧಿಕಾರಿ ಪ್ರವೃತ್ತಿ ಖಂಡನೀಯವಾದುದು. ಇದೊಂದು ಜನ ವಿರೋಧಿ ಸರ್ಕಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲಸಂಗಮ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದ ಹೋರಾಟವನ್ನು ಶತಾಯಗತಾಯ ತಡೆಗಟ್ಟಲು ಪೊಲೀಸರನ್ನು ಮುಂದಿಟ್ಟುಕೊಂಡ ಸರ್ಕಾರ ಪ್ರಯತ್ನ ನಡೆಸಿದೆ. ಟ್ರ್ಯಾಕ್ಟರ್ ಮೆರವಣಿಗೆಗೆ ಕಡಿವಾಣ ಹಾಕಿತು. ಹೋರಾಟದಲ್ಲಿ ತೊಡಗಿದ್ದ ಹಲವು ನಾಯಕರನ್ನು ವಶಕ್ಕೆ ಪಡೆದರು. ಕೊನೆಯಲ್ಲಿ ಲಾಠಿ ಚಾರ್ಜ ಮಾಡುವ ಮೂಲಕ ಪ್ರತಿಭಟನೆಯನ್ನು ದಮನ ಮಾಡಲು ಸರ್ಕಾರ ಹೊರಟಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.