ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗೆ ಹೆಚ್ಚಿನ ಒತ್ತು: ಸಭಾಧ್ಯಕ್ಷ ಯು.ಟಿ.ಖಾದರ್

ಹೊಸದಿಗಂತ ವರದಿ,ಬೆಳಗಾವಿ:

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿ.೯ರಿಂದ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆಯಿದ್ಜು, ನಿರ್ದಿಷ್ಟ ದಿನಾಂಕವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಸಿಎಂ‌ ಘೋಷಣೆ ಮಾಡಲಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ತಿಳಿಸಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಪೂರ್ವ ಸಿದ್ಧತಾ ಸಭೆ ಬಳಿಕ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಸಿದ್ಧತೆಗಾಗಿ ಅಧಿಕಾರಿಗಳ ಸಭೆಯನ್ನು ನಡೆಸಿ ಸಲಹೆ-ಸೂಚನೆಗಳನ್ನು ನೀಡಲಾಗಿದೆ ಎಂದರು.

ಕಳೆದ ವರ್ಷ ಅತ್ಯುತ್ತಮ ರೀತಿಯಲ್ಲಿ ಅಧಿವೇಶನ ನಡೆದಿದ್ದು, ಈ ಬಾರಿ ಇನ್ನಷ್ಟು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು. ಉ.ಕ. ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಸಮಯ ಮೀಸಲು ಇಡಲಾಗುವುದು ಎಂದು ಹೇಳಿದರು.

ವಿಧಾನಮಂಡಳ ಕಲಾಪ ವೀಕ್ಷಣೆಗೆ ಎಲ್ಲರೂ ವೀಕ್ಷಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಕಳೆದ ಬಾರಿಯಂತೆ ಶಾಲಾ ಮಕ್ಕಳಿಗೆ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.ಕಾಂಗ್ರೆಸ್ ಅಧಿವೇಶನ ನೂರನೇ ವರ್ಷಾಚರಣೆ ಕುರಿತು ಸರಕಾರ ನಿರ್ಧರಿಸಲಿದೆ. ಈ ಬಾರಿ ವಿಧಾನಮಂಡಳ‌ ಕಲಾಪದಲ್ಲಿ ಸಕಾರಾತ್ಮಕ ಚರ್ಚೆಗಳು ನಡೆಯಲಿವೆ ಎಂದು ಆಶಯ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಹಾಗೂ ಕಿತ್ತೂರು ಚನ್ನಮ್ಮ ವಿಜಯೋತ್ಸವದ 200 ನೇ ವರ್ಷಾಚರಣೆ ಕುರಿತು ಅಧಿವೇಶನ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು. ಈ ಬಾರಿಯ ದುಂದು ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ಅಧಿವೇಶನದ ವೇಳೆ ಪ್ರತಿಭಟನೆಗಳಿಗೆ ಪ್ರತಿಬಾರಿಯಂತೆ ಅವಕಾಶ ನೀಡಲಾಗುವುದು. ಪ್ರಮುಖ ಸಮಸ್ಯೆಗಳ ಕುರಿತು ಆಯಾ ಇಲಾಖೆಯ ಸಚಿವರ ಮಟ್ಟದಲ್ಲಿ ಚರ್ಚೆ ನಡೆಸಲು ನಿರ್ದೇಶನ ನೀಡಲಾಗುವುದು ಎಂದು ಖಾದರ್ ಮಾಹಿತಿ ನೀಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಡಿಸೆಂಬರ್ 9 ರಿಂದ 20 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ಸಾಧ್ಯತೆಯಿದೆ. ಆದರೆ ಇನ್ನೂ ದಿನಾಂಕ ಅಂತಿಮಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆಯನ್ನು ಆರಂಭಿಸಲಾಗಿದೆ ಎಂದರು.

ಕಾಂಗ್ರೆಸ್ ಅಧಿವೇಶನ ಮತ್ತಿತರ ಕಾರ್ಯಕ್ರಮಗಳ ರೂಪುರೇಷೆಗಳನ್ನು ತಯಾರಿಸಲಿದೆ. ಶಾಸಕರ ಸಹಭಾಗಿತ್ವ ಹೆಚ್ಚಿಸಲು ಕ್ರಮ ಆದಷ್ಟು ಬೇಗನೇ ಶಾಸಕರ ಭವನ ನಿರ್ಮಾಣಕ್ಕೆ ಸೂಕ್ತ ಪ್ರಸ್ತಾವ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಶಾಸಕರ ಭವನ ಸೇರಿದಂತೆ ಶಾಶ್ವತ ಮೂಲ ಸೌಕರ್ಯಗಳನ್ನು ನಿರ್ಮಾಣ ಮಾಡಲು ಆದ್ಯತೆ ನೀಡಲಾಗುವುದು ಎಂದು ಹೊರಟ್ಟಿ ಹೇಳಿದರು.

ಶಾಸಕ ಆಸಿಫ್(ರಾಜು) ಸೇಠ್, ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಪಿ ರೋಹನ್ ಜಗದೀಶ್, ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!