Friday, December 8, 2023

Latest Posts

ಬಾಗಲಕೋಟೆಯಲ್ಲಿ ರನ್ನ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಗ್ರೀನ್ ಸಿಗ್ನಲ್: ಸಚಿವ ಆರ್. ಬಿ. ತಿಮ್ಮಾಪೂರ

ಹೊಸದಿಗಂತ ವರದಿ,ಬಾಗಲಕೋಟೆ:

ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿರುವ ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ನೀಡಿ 2023-24 ನೇ ಸಾಲಿನಲ್ಲಿ ಕಬ್ಬು ಅರೆಯಲು ಅನುಮತಿ ನೀಡಲಾಗಿದೆ. ಅಲ್ಲದೇ ಅಪೆಕ್ಸ್ ಅಥವಾ ಬಿಡಿಸಿಸಿ ಬ್ಯಾಂಕ್‌ನಿಂದ 40 ಕೋಟಿ ಸಾಲ ಪಡೆಯಲು ಸರ್ಕಾರದ ಖಾತರಿ ನೀಡಲು ಸರ್ಕಾರ ಒಪ್ಪಿದೆ. ಜೊತೆಗೆ ಗುತ್ತಿಗೆ ನೀಡಲು ಸಿದ್ದಪಡಿಸಿರುವ ಟೆಂಡರ್ ಡ್ಯಾಕುಮೆಂಟ್‌ಗೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೆಟಿಪಿಪಿ ಆ್ಯಕ್ಟ್ 1999 ನಿಯಮ 2000 ಪ್ರಕಾರ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ.

ರೈತರ ಹಿತ ಕಾಯುವಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಕೊಟ್ಟ ಮಾತಿನಂತೆ ನಿರಂತರವಾಗಿ ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಶ್ರಮಿಸಿದ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸಭೆಯಲ್ಲಿ ಅನುಮತಿ ಸಿಗುವ ಮೂಲಕ ಫಲ ಸಿಕ್ಕಿದೆ. ಲೀಸ್ ಜೊತೆಗೆ 40 ಕೋಟಿ ಸಾಲಕ್ಕೆ ಶ್ಯೂರಿಟಿ ನೀಡಿರುವುದು ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ತೋರಿಸುತ್ತದೆ. ಶೀಘ್ರದಲ್ಲೇ ಟೆಂಡರ್ ಕರೆದು ಉತ್ತಮ ಬಿಡ್ ದಾರರಿಗೆ ಗುತ್ತಿಗೆ ನೀಡುವ ಮೂಲಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಡಿಸಿಎಂ ಡಿಕೆ ಶಿವಕುಮಾರ್‌ರವರು, ಸಚಿವ ಸಂಪುಟದ ಎಲ್ಲಾ ಸದಸ್ಯರಿಗೆ ಧನ್ಯವಾದ ಸಲ್ಲಿಸುವುದಾಗಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!