ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿ ಮಾಸ್ಟರ್ಮೈಂಡ್ ಅಬ್ದುಲ್ ಮಲಿಕ್ನನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ್ದ ಘರ್ಷಣೆಯಲ್ಲಿ ಆರು ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಮಲಿಕ್ಗೆ ಸೇರಿತ್ತು ಎಂದು ಹೇಳಲಾಗಿದ್ದು, ಸರ್ಕಾರಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಖರೀದಿಸಿದ ಎಂದು ತಿಳಿದು ಬಂದಿದೆ. ಘಟನೆ ನಡೆದ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದು ಬಂದಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.