August 19, 2026
Wednesday, August 19, 2026
spot_img

ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಬ್ರೇಕ್: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಕಾವು ಪಡೆದಿರುವ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜುಲೈ 20 ರಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಚಳವಳಿ ವೇಳೆ ಜರುಗಿದ ಹಿಂಸಾಚಾರದ ಕುರಿತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು, ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ದೂರುಗಳನ್ನು ಆಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ, ನಿವೃತ್ತ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವ ಸುಳಿವು ನೀಡಿದೆ.

ರಾಜ್ಯಗಳಿಗೆ ಸುಪ್ರೀಂ ನೋಟಿಸ್ ಹಾಗೂ ಮಾರ್ಗದರ್ಶಿ ಸೂತ್ರ

ಈ ಕುರಿತು ಕೇಂದ್ರ ಸರ್ಕಾರ, ದೆಹಲಿ ಸೇರಿದಂತೆ ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಗೆ ಕೋರ್ಟ್ ನೋಟಿಸ್ ನೀಡಿದೆ. ಸಲ್ಲಿಕೆಯಾಗಿರುವ ಎಫ್‌ಐಆರ್‌ಗಳ ಆಧಾರದ ಮೇಲೆ ತನಿಖೆ ಮುಂದುವರಿಸಲು ಅವಕಾಶ ನೀಡಲಾಗಿದ್ದರೂ, ಅಪರಾಧ ಹಿನ್ನೆಲೆಯಿಲ್ಲದ ಯುವ ಸಮುದಾಯ ಹಾಗೂ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಬಲವಂತದ ಅಥವಾ ಕಠಿಣ ಕ್ರಮ ಜರುಗಿಸಬಾರದು ಎಂದು ಪೀಠವು ಸ್ಪಷ್ಟವಾಗಿ ಎಚ್ಚರಿಸಿದೆ.

ಡಿಜಿಟಲ್ ಡೇಟಾ ಭದ್ರತೆಗೆ ಕಟ್ಟುನಿಟ್ಟಿನ ಆದೇಶ

ಪ್ರತಿಭಟನಾಕಾರರ ಖಾಸಗಿ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನ್ಯಾಯಾಲಯ ಪ್ರಮುಖ ಸೂಚನೆ ನೀಡಿದೆ. ಪ್ರತಿಭಟನಾಕಾರರ ವೈಯಕ್ತಿಕ ವಿವರ ಮತ್ತು ಡಿಜಿಟಲ್ ಮಾಹಿತಿಯನ್ನು ಅತ್ಯಂತ ಭದ್ರವಾಗಿಡಬೇಕು. ಯಾವುದೇ ಕಾರಣಕ್ಕೂ ಈ ಗೌಪ್ಯ ಡೇಟಾವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !