ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬ ಹಾಗೂ ಗಾಯಾಳುಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಹಾರ ಘೋಷಿಸಿದ್ದಾರೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಯೋಗಿ ಆದಿತ್ಯನಾಥ್, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಆರ್ಥಿಕ ನೆರವು ನೀಡಲು ಸೂಚನೆ ನೀಡಲಾಗಿದೆ ಎಂದರು.
ಕ್ಷಣ ಕ್ಷಣದ ಬೆಳವಣಿಗೆಗಳ ಮೇಲೆ ಖುದ್ದು ಮುಖ್ಯಮಂತ್ರಿಯೇ ನೇರ ಕಣ್ಣಿಟ್ಟಿದ್ದು, ಇಬ್ಬರು ಸಚಿವರು, ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದಾರೆ. ಎಡಿಜಿ, ಆಗ್ರಾ ಮತ್ತು ಕಮಿಷನರ್, ಅಲಿಘರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಅಲ್ಲದೇ ದುರಂತಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮಾಡಲು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ 25 ಕ್ಕೂ ಹೆಚ್ಚು ಮಂದಿ ಇಟಾಹ್ ಮೂಲದವರು ಎಂದು ಹೇಳಲಾಗಿದೆ.