ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಿರುವ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ ಬೆಲೆ ಏರಿಕೆಯಿಂದ ಜೀವನ ವೆಚ್ಚ ಹೆಚ್ಚಾಗುತ್ತಿದ್ದು, ಅದರ ನೇರ ಹೊರೆ ಜನರ ಮೇಲೇ ಬೀಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ಮೋದಿ ಯಾವಾಗ ಜವಾಬ್ದಾರಿ ತೆಗೆದುಕೊಳ್ಳುತ್ತಾರೆ?”
ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, “ಎಲ್ಲ ಹೊರೆಗಳನ್ನು ಜನರ ಮೇಲೇ ಹಾಕಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ಯಾವಾಗ ಸ್ವೀಕರಿಸುತ್ತದೆ?” ಎಂದು ಪ್ರಶ್ನಿಸಿದರು. ರಷ್ಯಾದಿಂದ ಕಡಿಮೆ ದರದಲ್ಲಿ ತೈಲ ಖರೀದಿಸಿದ್ದೇವೆ ಎಂದು ಹೇಳಿದ್ದ ಕೇಂದ್ರ ನಾಯಕರು ಈಗ ದರ ಏರಿಕೆ ಬಗ್ಗೆ ಮೌನವಾಗಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ:
“ಆರ್ಥಿಕ ಒತ್ತಡ ಹೆಚ್ಚುತ್ತಿದೆ”
ಇಂಧನ ದರ ಏರಿಕೆಯಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ರೂಪಾಯಿ ಮೌಲ್ಯ ಕುಸಿತ, ಯೂರಿಯಾ ಕೊರತೆ ಮತ್ತು ವಿದೇಶಿ ಹೂಡಿಕೆ ಕುಂಠಿತವಾಗಿರುವುದನ್ನೂ ಅವರು ಪ್ರಸ್ತಾಪಿಸಿದರು. ಕರ್ನಾಟಕದಿಂದ ಅತೀ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿರುವುದರಿಂದ ಮೊದಲು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೆರಿಗೆ ಕಡಿತ ಮಾಡಲಿ ಎಂದು ಒತ್ತಾಯಿಸಿದರು.
ಚುನಾವಣಾ ಆಯೋಗದ ಮೇಲೂ ಟೀಕೆ
ಎಸ್ಐಆರ್ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸಂಸ್ಥೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗದ ಮೇಲೂ ಬಿಜೆಪಿ ಪ್ರಭಾವ ಹೆಚ್ಚಾಗಿದೆ ಎಂದು ಹೇಳಿ, “ಸ್ವತಂತ್ರ ಸಂಸ್ಥೆಗಳು ಒತ್ತಡದಲ್ಲಿ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ಕಿಡಿಕಾರಿದರು.



