May 18, 2026
Monday, May 18, 2026
spot_img

ದಕ್ಷಿಣದಲ್ಲಿ ಕಾಂಗ್ರೆಸ್ ಆಟ ಸದ್ಯದಲ್ಲೇ ಅಂತ್ಯ? ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಎದ್ದಿರುವ ಎಲ್ಲಾ ವದಂತಿಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ತೆರೆ ಎಳೆದಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆ ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಉಭಯ ಪಕ್ಷಗಳ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಅಥವಾ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ದೃಢವಾಗಿ ಹೇಳಿದ್ದಾರೆ.

ಮೋದಿ-ಅಮಿತ್ ಶಾ ಜೊತೆಗಿನ ಬಾಂಧವ್ಯವೇ ನಮಗೆ ಶಕ್ತಿ

ನಾವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಕ್ರಿಯ ಪಾಲುದಾರರಾಗಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಮ್ಮ ಪಕ್ಷಕ್ಕೆ ಅತ್ಯಂತ ಆಪ್ತ ಹಾಗೂ ಬಲವಾದ ಸಂಬಂಧವಿದೆ. ಈ ಕಾರಣದಿಂದಾಗಿ ಮೈತ್ರಿ ಭವಿಷ್ಯದ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ಹೋರಾಟದ ವೇಳೆ ಎಷ್ಟೇ ಕಠಿಣ ಸವಾಲುಗಳು ಎದುರಾದರೂ, ನಾವೆಲ್ಲರೂ ಒಟ್ಟಿಗೆ ಕುಳಿತು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಿದ್ದೇವೆ ಎಂದು ದೊಡ್ಡಗೌಡರು ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಭವಿಷ್ಯದ ಬಗ್ಗೆ ದೇವೇಗೌಡರ ಮಾರ್ಮಿಕ ನುಡಿ

ದಕ್ಷಿಣ ಭಾರತದ ರಾಜ್ಯಗಳಾದ ಕೇರಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ಅಧಿಕಾರದಲ್ಲಿದೆ ಅಥವಾ ಪ್ರಬಲವಾಗಿದೆ ಎಂದು ಬೀಗುತ್ತಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ. ಸದ್ಯಕ್ಕೆ ನಾನು ಈ ಬಗ್ಗೆ ಹೆಚ್ಚೇನೂ ಮಾತನಾಡುವುದಿಲ್ಲ, ಅದಕ್ಕೆ ಸೂಕ್ತ ಸಮಯ ಬಂದಾಗ ಖಂಡಿತವಾಗಿಯೂ ಪ್ರತಿಕ್ರಿಯಿಸುತ್ತೇನೆ ಎಂದು ದೇವೇಗೌಡರು ವಿರೋಧ ಪಕ್ಷಗಳಿಗೆ ಮಾರ್ಮಿಕವಾಗಿ ಎಚ್ಚರಿಕೆ ನೀಡಿದರು.

ಜೆಡಿಎಸ್ ಕಾರ್ಯಕರ್ತರಿಗೆ ಶಿಸ್ತಿನ ಪಾಠ

ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿದ ದೇವೇಗೌಡರು, ಜೆಡಿಎಸ್ ಕಾರ್ಯಕರ್ತರು ಮತ್ತು ಶಾಸಕರಿಗೆ ಮಹತ್ವದ ಸಂದೇಶ ನೀಡಿದರು. “ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಬೇಕು. ಪಕ್ಷಕ್ಕೆ ನಿಷ್ಠರಾಗಿರುವುದು ಅತ್ಯಂತ ಮುಖ್ಯ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ವಹಿಸುವ ಜವಾಬ್ದಾರಿಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕು” ಎಂದು ಅವರು ಕರೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !