ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಪಕ್ಷ ವಿಸರ್ಜನೆ ಯಾವಾಗ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ನ ಸಚಿವರು ಹಾಗೂ ಶಾಸಕರುಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಎಂದು ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ.
ಕನ್ನಡವನ್ನೂ ಕಲಿಸುತ್ತೇನೆ
ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ.
ಮುಂದಿನ ಆಡಳಿತದ ಬಗ್ಗೆ ಆತಂಕವಿದೆ
ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ, ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ. ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು. ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಬಗ್ಗೆ ಈಗಲೇ ಆತಂಕವಾಗುತ್ತಿದೆ.
ಅಜ್ಞಾನ ಹೋಗಲಾಡಿಸುತ್ತೇನೆ
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ಎಚ್ಡಿಕೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ಸಿಗರನ್ನು ಕುಟುಕಿದ್ದಾರೆ.
https://twitter.com/hd_kumaraswamy/status/1663735249556373504?s=20