Monday, January 12, 2026

ಮುಂಬೈ ಬಗ್ಗೆ ಮಾತನಾಡುವ ಅಧಿಕಾರ ಅವರಿಗಿಲ್ಲ: ಅಣ್ಣಾಮಲೈ ಹೇಳಿಕೆಗೆ ರಾಜ್ ಠಾಕ್ರೆ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ನಗರದ ಕುರಿತು ನೀಡದ ಹೇಳಿಕೆಗಳು ಮತ್ತೊಮ್ಮೆ ಮಹಾರಾಷ್ಟ್ರ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿವೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರು ಬಿಜೆಪಿ ನಾಯಕ ಕೆ. ಅಣ್ಣಾಮಲೈ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಂಬೈ ಬಗ್ಗೆ ಮಾತನಾಡುವ ಹಕ್ಕು ಅವರಿಗೆ ಇಲ್ಲ ಎಂದು ಹೇಳಿದ್ದಾರೆ.

ತಮಿಳುನಾಡಿನಿಂದ ಬಂದ ಕೆಲವರು ಮುಂಬೈ ಮತ್ತು ಮಹಾರಾಷ್ಟ್ರದ ಸಂಬಂಧವನ್ನೇ ಪ್ರಶ್ನಿಸುವ ಧಾಟಿಯಲ್ಲಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ ಠಾಕ್ರೆ, “ಮುಂಬೈ ಮಹಾರಾಷ್ಟ್ರದ ಅವಿಭಾಜ್ಯ ಅಂಗ. ಈ ನಗರವನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯತ್ನಗಳು ಹೊಸದಲ್ಲ. ಇಂತಹ ಹೇಳಿಕೆಗಳ ಹಿಂದೆ ದೊಡ್ಡ ರಾಜಕೀಯ ಪಿತೂರಿ ಅಡಗಿದೆ” ಎಂದು ಆರೋಪಿಸಿದರು. ಮರಾಠಿ ಜನರು ಮತ್ತು ಮಹಾರಾಷ್ಟ್ರವನ್ನು ಗುರಿಯಾಗಿಸಿಕೊಂಡು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದರು.

ಮುಂಬೈಗಾಗಿ ಅನೇಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಬಲಿದಾನವನ್ನು ಮರೆಸಲು ಸಾಧ್ಯವಿಲ್ಲ. ಈ ಕಾರಣದಿಂದಲೇ ಮುಂದಿನ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ ಠಾಕ್ರೆ ಹೇಳಿದರು. ಮುಂಬೈ ವಿಚಾರದಲ್ಲಿ ತಮ್ಮ ಹೋರಾಟ ಮುಂದುವರಿಯಲಿದೆ ಎಂಬುದನ್ನೂ ಅವರು ಸ್ಪಷ್ಟಪಡಿಸಿದರು.

ಇತ್ತ, ಈ ವಿವಾದಕ್ಕೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಅಣ್ಣಾಮಲೈ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅಣ್ಣಾಮಲೈ ಅವರ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ ಅವರು, ಮುಂಬೈ ಮಹಾರಾಷ್ಟ್ರದ ನಗರವಲ್ಲ ಎಂದು ಅಣ್ಣಾಮಲೈ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂಬೈ ಅಂತಾರಾಷ್ಟ್ರೀಯ ನಗರ ಎಂದು ಅವರು ಉದ್ದೇಶಿಸಿದ್ದು, ಭಾಷಾ ಗೊಂದಲದಿಂದ ವಿವಾದ ಉಂಟಾಗಿದೆ ಎಂದು ಫಡ್ನವಿಸ್ ತಿಳಿಸಿದ್ದಾರೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!