Saturday, October 18, 2025

ಸೆ.15ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಮತ್ತೆ ಮಳೆ ತನ್ನ ಆರ್ಭಟ ಮುಂದುವರೆಸಲು ಸಜ್ಜಾಗಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ ಸೆಪ್ಟೆಂಬರ್ 15ರವರೆಗೆ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಈ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ನಿರೀಕ್ಷೆಯಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಇಲಾಖೆಯು ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ಆದರೆ ಈ ಜಿಲ್ಲೆಗಳಿಗೆ ಯಾವುದೇ ಅಲರ್ಟ್ ಘೋಷಿಸಲಾಗಿಲ್ಲ.

ಮಧ್ಯ ಕರ್ನಾಟಕದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡಾ ಭಾರೀ ಮಳೆಯ ಮುನ್ಸೂಚನೆ ಇದೆ.

ಇನ್ನು ರಾಜ್ಯ ರಾಜಧಾನಿಯಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲೂ ಮಳೆಯ ಸಾಧ್ಯತೆ ಇದೆ. ವಿಶೇಷವಾಗಿ ಸಂಜೆ ವೇಳೆಗೆ ಇದ್ದಕ್ಕಿದ್ದಂತೆ ಮಳೆ ಸುರಿಯುವ ಸ್ಥಿತಿ ಮುಂದುವರಿಯುವ ನಿರೀಕ್ಷೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದ್ದರೂ, ಈ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಂಭವ ಇದೆ.

error: Content is protected !!