ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು (Rain alert) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
”
ಅದೇ ರೀತಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ತುಮಕೂರಿನಲ್ಲೂ ವರುಣನ ಅಬ್ಬರವಾಗಲಿದೆ.
ಬೆಂಗಳೂರು ನಗರದಲ್ಲಿ ಭಾಗಶ: ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶನಿವಾರ ಮಳೆಯಾಗಿದೆ. ಬೀದರ್ನ ಔರಾದ್, ಕೋಲಾರದ ಚಿಂತಾಮಣಿ, ರಾಯಲ್ಪಾಡು ತಲಾ 4 ಸೆ.ಮೀ ಮಳೆ ಆಗಿದ್ದು, ಗೇರುಸೊಪ್ಪ, ಚಿಂಚೋಳಿ, ಮಂತಾಲ, ಮನ್ನಾಳಿ, ಸಿಂದಗಿ, ಸೈದಾಪುರದಲ್ಲಿ ತಲಾ 2 ಸೆ.ಮೀ ಮಳೆಯಾಗಿದೆ.
ಉಡುಪಿಯಲ್ಲಿ ಬೆಳಗ್ಗಿನಿಂದಲೇ ತುಂತುರು ಮಳೆ ಶುರುವಾಗಿದ್ದರಿಂದ ಜನರ ಕೆಲಸ ಕಾರ್ಯಗಳಿಗೆ ಕಿರಿಕಿರಿ ಉಂಟಾಗಿತ್ತು. ಇನ್ನು ಕಳೆದ ಒಂದು ವಾರದಿಂದ ತಾಪಮಾನ 35 ರಿಂದ 37 ಡಿಗ್ರಿವರೆಗೂ ಹೆಚ್ಚಾಗಿತ್ತು. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿ ಜನರಿಗೆ ತುಂತುರು ಮಳೆಯಿಂದ ವಾತಾವರಣ ತಂಪಾಗಿತ್ತು. ಮುಂದಿನ ಒಂದು ವಾರಗಳ ಕಾಲ ಸಾಧಾರಣ ಮಳೆ ಆಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.