ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಮುಂಗಾರು ತಡವಾಗಿ ಎಂಟ್ರಿ ಕೊಟ್ಟಿದ್ದರೂ ಇಂದು ರಾಜ್ಯದ ಹಲವೆಡೆ ಮಳೆರಾಯ ಕನಿಕರಿಸಿದ್ದಾನೆ. ಬೆಳ್ಳಂಬೆಳಗ್ಗೆ ಮಳೆರಾಯನ ಆಗಮನವಾಗಿದ್ದು, ಭೂಮಿಗೆ ತಂಪೆರೆದಿದೆ. ಮಳೆಯಿಲ್ಲದೆ ತಲೆಮೇಲೆ ಕೈ ಹೊತ್ತು ಕುಳಿತಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ.
ಇನ್ನೂ ಕರಾವಳಿ ಭಾಗದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೊತೆಗೆ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಯಾದಗಿರಿ, ಗದಗ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬೆಂಗಳೂರು ನಗರದಲ್ಲಿ ಭಾರೀ ಮಳೆ
ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದ ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಮಲ್ಲೇಶ್ವರಂ, ರಾಜಾಜಿನಗರ, ಯಲಹಂಕ, ಮೇಖ್ರಿಸರ್ಕಲ್, ಕೆಐಎಎಲ್ ನಿಲ್ದಾಣ, ಹಲಸೂರು, ಎಂಜಿ ರಸ್ತೆ, ಬೊಮ್ಮನಹಳ್ಳಿ, ಕೆಂಗೇರಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳೆಲ್ಲಾ ನದಿಗಳಂತಾಗಿವೆ.
ಭಾರೀ ಮಳೆಯಿಂದಾಗಿ ಅಂಡರ್ಪಾಸ್ಗಳಲ್ಲಿ ನೀರಿ ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಡಿತ ಕೂಡ ಮಾಡಲಾಗಿದೆ.