ಹೊಸದಿಗಂತ ವರದಿ ಮಂಡ್ಯ :
ಹಳೇಮೈಸೂರು ಪ್ರಾಂತ್ಯದ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕೆ.ಆರ್.ಎಸ್. ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡುವುದರಿಂದ ಜಲಾಶಯಕ್ಕೆ ಅಪಾಯ ಬರಬಹುದು ಎಂಬ ಆತಂಕದಿಂದ ರೈತರು, ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ಪರಿಸರವಾದಿಗಳು ಸೇರಿದಂತೆ ವಿವಿಧ ಚಳವಳಿಗಾರರ ವಿರೋಧದ ನಡುವೆ ರಾಜ್ಯ ಸರ್ಕಾರ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ನಡೆಸಲು ಕಾಮಗಾರಿ ಕೈಗೊಂಡಿತ್ತು.
ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಪ್ರಶ್ನಿಸಿ ರೈತ ಹೋರಾಟಗಾರ ಕೆ. ಬೋರಯ್ಯ ಅವರು ಅಮ್ಯೂಸ್ಮೆಂಟ್ ಪಾರ್ಕ್ ವಿರೋಧಿಸಿ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದ ಅರ್ಜಿಯನ್ನು ಕೈಗೆತ್ತಿಕೊಂಡ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕಾಮೇಶ್ವರರಾವ್ ಹಾಗೂ ಸಿ.ಎಂ. ಜೋಶಿ ಅವರುಗಳು ಎರಡು ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿ ಕನ್ನಂಬಾಡಿ ಅಣೆಕಟ್ಟೆ ಬಳಿ ರಾಜ್ಯಸರ್ಕಾರ ನಿರ್ಮಿಸಲುದ್ದೇಶಿಸಿದ್ದ ಅಮ್ಯೂಸ್ಮೆಂಟ್ ಪಾರ್ಕ್ಗೆ ತಡೆಯಾಜ್ಞೆ ನೀಡಿದೆ.