July 17, 2026
Friday, July 17, 2026
spot_img

ಹಿಮಾಚಲ ಪ್ರದೇಶದಲ್ಲಿ ಪ್ರವಾಹ: 5 ಕೋಟಿ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ಮಳೆ, ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ದುರಂತಗಳಿಂದ ನೂರಾರು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪತ್ತು ಪರಿಹಾರ ಮತ್ತು ಪುನರ್ವಸತಿಗೆ 5 ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದ್ದಾರೆ.

‘ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ. ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.

ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಳೆದ ಮಂಗಳವಾರ ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದರು. ಈ ವೇಳೆ 1,500 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !