ಹೊಸದಿಗಂತ ಡಿಜಿಟಲ್ ಡೆಸ್ಕ್
ವಾರಣಾಸಿಯ ಗ್ಯಾನವಾಪಿ ಮಸೀದಿಯಲ್ಲಿ ಪತ್ತೆಯಾದ ʼಶಿವಲಿಂಗʼ ದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅಕ್ಷೇಪಾರ್ಹ ಟ್ವಿಟ್ ಮಾಡಿದ್ದ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ರನ್ನು ಬಂಧಿಸಲಾಗಿದೆ.
ಹಿಂದೂ ಕಾಲೇಜಿನಲ್ಲಿ ಇತಿಹಾಸ ವಿಚಾರ ಬೋಧಿಸುವ ರತನ್ ಲಾಲ್ ವಾರಣಾಸಿಯಲ್ಲಿ ಪತ್ತೆಯಾದ ಶಿವಲಿಂಗದ ಕುರಿತಾಗಿ ಅಕ್ಷೇಪಾರ್ಹ, ಪ್ರಚೋದನಾಕಾರಿ ಟ್ವೀಟ್ ಹಂಚಿಕೊಂಡಿದ್ದಾರೆ ಎಂದು ದೆಹಲಿಯ ವಕೀಲ ವಿನೀತ್ ಜಿಂದಾಲ್ ಮಂಗಳವಾರ ರಾತ್ರಿ ದೂರು ದಾಖಲಿಸಿದ್ದರು. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು, ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ವಕೀಲರು ತಮ್ಮ ದೂರಿನಲ್ಲಿ ಉಲಲ್ಲೇಖಿಸಿದ್ದರು. ಈ ಸಂಬಂಧ ಲಾಲ್ ರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಉತ್ತರ ದೆಹಲಿ ಸೈಬರ್ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ.
ಲಾಲ್ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295-ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ