ಹೊಸದಿಗಂತ ವರದಿ,ಚಿತ್ರದುರ್ಗ :
ವಿಶ್ವ ಹಿಂದೂ ಪರಿಷತ್ – ಬಜರಂಗದಳದ ವತಿಯಿಂದ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಐತಿಹಾಸಿಕ ಚಿತ್ರದುರ್ಗವನ್ನು ಅಲಂಕರಿಸಲಾಗಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಎಸ್.ಆರ್.ಪ್ರಭಂಜನ್ ತಿಳಿಸಿದರು.
ಹಿಂದೂ ಮಹಾಗಣಪತಿ ಪೆಂಡಾಲ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರದ ಶೋಭಾಯಾತ್ರೆಗೆ ಸಿದ್ಧತೆಗಳನ್ನು ಕೈಗೊಂಡಿದ್ದು, ಲಕ್ಷಾಂತರ ಜನ ಭಾಗಿಯಾಗುವ ನಿರೀಕ್ಷೆಯಿದೆ. ಬೆಳಿಗ್ಗೆ ೧೦ ಗಂಟೆಗೆ ಮಹಾರಾಷ್ಟ್ರ ಕೊಲ್ಲಾಪುರದ ಕನ್ನೇರಿಮಠ್ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಮೆರವಣಿಗೆ ಉದ್ಘಾಟಿಸುವರು. ಹನ್ನೆರಡಕ್ಕೂ ಹೆಚ್ಚು ಸ್ವಾಮೀಜಿಗಳು ಶೋಭಾಯಾತ್ರೆ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ವಿಶೇಷ ಕಲಾ ತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕಷ್ಟು ಕಾರ್ಯಕರ್ತರು, ಜನಸಾಮಾನ್ಯರು ಕೆಲಸ ಮಾಡಿದ್ದಾರೆ. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು ಅಲ್ಲಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್ ಮಾತನಾಡಿ, ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗದಲ್ಲಿ ಅಲಂಕಾರ ಮಾಡಿರುವುದನ್ನು ನೋಡಿ ಗ್ರಾಮೀಣ ಪ್ರದೇಶಗಳಿಂದ ತಂಡೋಪ ತಂಡವಾಗಿ ಜನ ಆಗಮಿಸಿ ಹಿಂದೂ ಮಹಾಗಣಪತಿಯ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಹೆಚ್ಚಿನ ಜನ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅಲಂಕಾರ ಆಕರ್ಷಣೀಯವಾಗಿರುವುದರಿಂದ ಸಾಗರೋಪಾದಿಯಲ್ಲಿ ಜನ ಬರುತ್ತಾರೆ ಎಂದರು.
ಹದಿನೇಳು ವರ್ಷಗಳಿಂದ ಹಿಂದೂ ಮಹಾಗಣಪತಿಗೆ ಬರದೇ ಇರುವವರು ಈ ಬಾರಿ ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಹಿಂದೂ ಮಹಾಗಣಪತಿ ಒಂದು ಶಕ್ತಿಯಾಗಿ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ ಮುಖಂಡ ಟಿ.ಬದ್ರಿನಾಥ್, ಷಡಾಕ್ಷರಪ್ಪ, ಸಂದೀಪ್, ಪಿ.ರುದ್ರೇಶ್, ರಂಗಸ್ವಾಮಿ, ಶರಣ್ಕುಮಾರ್ ಮತ್ತಿತರರು ಹಾಜರಿದ್ದರು.