ಹೊಸದಿಗಂತ ವರದಿ,ಮಡಿಕೇರಿ:
ಮನೆಯ ಹಿಂಬಾಗಿಲು ಮುರಿದು,ಒಳಗಿದ್ದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭಾಗಮಂಡಲ ಪೊಲೀಸ್ ಠಾಣೆ ವ್ಯಾಪ್ತಿಯ ಅಯ್ಯಂಗೇರಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅಯ್ಯಂಗೇರಿ ಗ್ರಾಮದ ಕೆ.ಕೆ.ಮಿಲಾಜ್ (22) ಹಾಗೂ ಫಾತಿಮಾ(26) ಬಂಧಿತ ಆರೋಪಿಗಳಾಗಿದ್ದು, ಅವರಿಂದ 177 ಗ್ರಾಂ ಚಿನ್ನಾಭರಣ, ಆರೋಪಿಗಳು ಕೃತ್ಯಕ್ಕೆ ಬಳಸಿದ ಒಂದು ದ್ವಿ-ಚಕ್ರ ವಾಹನ ಹಾಗೂ ಎರಡು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಯ್ಯಂಗೇರಿ ಗ್ರಾಮದ ನಿವಾಸಿ ಕೆ.ಹೆಚ್. ಜಲೀನಾ
ಎಂಬವರು ಏ.12ರಂದು ಮನೆಗೆ ಬೀಗ ಹಾಕಿಕೊಂಡು ಸಂಬಂದಿಕರ ಮನೆಗೆ ತೆರಳಿದ್ದು, ಮರುದಿನ ಸಂಜೆ ಮರಳಿ ಮನೆಗೆ ಬಂದು ನೋಡಿದಾಗ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಬೀರುವಿನಲ್ಲಿದ್ದ ಅಂದಾಜು 232 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದು ಗೋಚರಿಸಿತ್ತು. ಈ ಕುರಿತು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಸ್.ಮಹೇಶ್ ಕುಮಾರ್ ಹಾಗೂ ಮಡಿಕೇರಿ ಗ್ರಾಮಾಂತರ ವೃತ್ತದ ಇನ್ಸ್ಪೆಕ್ಟರ್ ಎಲ್.ಅರುಣ್ ಅವರ ಮಾರ್ಗದರ್ಶನದಲ್ಲಿ ಭಾಗಮಂಡಲ ಠಾಣೆಯ ಪಿಎಸ್ಐ ಬಿ. ಶೋಭಾ ಲಮಾಣಿ,ನಾಪೋಕ್ಲು ಠಾಣೆಯ ಪಿಎಸ್ಐ ಈ.ಮಂಜುನಾಥ್ ಮತ್ತು ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನೊಳಗೊಂಡ ವೃತ್ತ ಮಟ್ಟದ ತನಿಖಾ ತಂಡ, ಘಟನೆ ನಡೆದ 48ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಯ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ. ಅಲ್ಲದೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅವರು ಶ್ಲಾಘಿಸಿದ್ದಾರೆ.